BW News Bureau : ಬಿಬಿಎಂಪಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ಈ ಕುರಿತು ತಿಳಿಸಿರುವ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಚಾರಿ, ಸುಪ್ರೀಂ ಕೋರ್ಟ್ ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿದೆ. ಮುಂಬರುವ ಆ.5ರೊಳಗೆ ಚುನಾವಣಾ ಆಯೋಗ ಬಿಬಿಎಂಪಿಗೆ ಚುನಾವಣೆ ನಡೆಸಲಿದೆ ಎಂದು ಹೇಳಿದ್ದಾರೆ.
ಸರ್ಕಾರ ಮೀಸಲಾತಿ ನಿಗದಿ ಮಾಡಿ ಮೀಸಲಾತಿ ಪಟ್ಟಿ ಕಳುಹಿಸಬೇಕಿದೆ. ನಂತರ ಚುನಾವಣೆ ದಿನಾಂಕ ನಿಗದಿ ಮಾಡಲಾಗುವುದು. ಸದ್ಯ ಗ್ರಾಮ ಪಂಚಾಯತಿ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷ ಮೀಸಲು ನಿಗದಿ ನಡೆಯುತ್ತಿದೆ. ಈ ಪ್ರಕ್ರಿಯೆ ಮುಗಿದ ನಂತರ ಬಿಬಿಎಂಪಿ ಚುನಾವಣೆ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಮೇ 31ರೊಳಗೆ ಬಿಬಿಎಂಪಿಗೆ ಚುನಾವಣೆ ನಡೆಸಬೇಕು. ಏ.13ರೊಳಗೆ ಮೀಸಲಾತಿ ಪಟ್ಟಿ ನೀಡಬೇಕೆಂದು ಹೈಕೋರ್ಟ್ ನ ಬಿ.ವಿ.ನಾಗರತ್ನಮ್ಮ ಅವರ ಏಕಸದಸ್ಯ ಪೀಠ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಿಭಾಗೀಯ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾಗ ಏಕಸದಸ್ಯ ಪೀಠದ ಆದೇಶವನ್ನು ವಜಾಗೊಳಿಸಿ ಆರು ತಿಂಗಳೊಳಗೆ ಚುನಾವಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲ, ರಾಮಮೋಹನ್ ಅವರ ವಿಭಾಗೀಯ ಪೀಠ ತೀರ್ಪು ನೀಡಿತ್ತು. ನಂತರ ಸರ್ಕಾರ ಹೈಕೋರ್ಟ್ ಗೆ ನೀಡಿದ್ದ ಮೀಸಲಾತಿ ಅಧಿಸೂಚನೆಯನ್ನು ವಾಪಸ್ ಪಡೆದಿತ್ತು. ವಿಭಾಗೀಯ ಪೀಠದ ತೀರ್ಪು ಪ್ರಶ್ನಿಸಿ ದೂರುದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಮೂರು ತಿಂಗಳೊಳಗೆ ಅಂದರೆ ಆಗಸ್ಟ್ 5ರೊಳಗೆ ಚುನಾವಣೆ ನಡೆಸಬೇಕೆಂದು ತೀರ್ಪು ನೀಡಿತ್ತು.
ಈ ನಡುವೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ಪರಿಶಿಷ್ಟ ಜಾತಿ/ ಪಂಗಡದವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 2001ರ ಜನಗಣತಿಯ ಪ್ರಕಾರ ಮೀಸಲಾತಿ ನಿಗದಿ ಮಾಡಲಾಗಿದೆ. 2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿ/ವರ್ಗದ ಸಂಖ್ಯೆ ಹೆಚ್ಚಳವಾಗಿದೆ. ಹಾಲಿ ಮೀಸಲಾತಿಯಿಂದ ನಮಗೆ ಅನ್ಯಾಯವಾಗುತ್ತದೆ. ಹೊಸ ಮೀಸಲಾತಿ ನೀಡಬೇಕೆಂದು ಮನವಿ ಮಾಡಿದ್ದರು. ಈ ಮನವಿಯನ್ನು ಪರಿಗಣಿಸಿದ ಹೈಕೋರ್ಟ್ ನಿಮ್ಮ ಆಕ್ಷೇಪವನ್ನು ಏಕಸದಸ್ಯ ಪೀಠದ ಮುಂದೆಯೇ ಸಲ್ಲಿಸಿ ಬಗೆಹರಿಸಿಕೊಳ್ಳಲು ಸೂಚಿಸಿತ್ತು. ಪರಿಶಿಷ್ಟ ಜಾತಿ/ಪಂಗಡದವರು ಮೀಸಲಾತಿ ನಿಗದಿ ಬಗ್ಗೆ ಏಕಸದಸ್ಯ ಪೀಠದ ಮುಂದೆ ಮನವಿ ಮಾಡಲಿದ್ದಾರೆ. ನ್ಯಾಯಾಲಯ ಯಾವ ತೀರ್ಮಾನ ಕೈಗೊಳ್ಳಲಿದೆ. ಸರ್ಕಾರ ಮೀಸಲಾತಿ ನಿಗದಿ ಮಾಡಿದ ಪಟ್ಟಿಯನ್ನು ಯಾವಾಗ ಆಯೋಗಕ್ಕೆ ಸಲ್ಲಿಸಲಿದೆ ಎಂಬುದು ಇನ್ನು ಅಯೋಮಯವಾಗಿದೆ.
ಒಟ್ಟಾರೆ ಚುನಾವಣಾ ಆಯೋಗ ಬಿಬಿಎಂಪಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚುನಾವಣೆ ನಡೆಸಲು ತಯಾರಿ ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಜುಲೈ ಕೊನೆವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ.