ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳ ಎಂಟು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.
ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ ಎಂಟು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಆಯಾ ಜಿಲ್ಲಾ ಎಸ್ಪಿಗಳ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ಬೆಂಗಳೂರಿನ ಹೊರವಲಯದ ಯಲಹಂಕ ನ್ಯಾಯಾಂಗ ಬಡಾವಣೆಯಲ್ಲಿರುವ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ತ್ಯಾಗರಾಜ್ ಅವರ ನಿವಾಸದಲ್ಲಿ ಎಸ್ಪಿ ಸೋನಿಯಾ ನಾರಂಗ್ ಅವರ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಸಿಬ್ಬಂದಿಗಳು ತಪಾಸಣೆ ಕೈಗೊಂಡು ಹಲವು ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಹಲವೆಡೆ ವಾಣಿಜ್ಯ ಮಳಿಗೆಗಳು ಹಾಗೂ ವಿವಿಧ ಬ್ಯಾಂಕ್ ಗಳಲ್ಲಿ ಪತ್ನಿ ಹಾಗೂ ಸಂಬಂಧಿಕರ ಹೆಸರಿನಲ್ಲಿ ಹೂಡಿಕೆ ಮಾಡಿರುವುದು ಸೇರಿದಂತೆ ಹಲವು ಪ್ರಮುಖ ಚರಾಚರ ಆಸ್ತಿಗಳನ್ನು ಪತ್ತೆ ಹಚ್ಚಲಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆಯ ಅಕೌಂಟ್ಸ್ ಸೂಪರ್ಟೆಂಡೆಂಟ್ ಕೃಷ್ಣ ಮಹದೇವಪ್ಪ ಅವರ ಕರಮಡಿಯಲ್ಲಿರುವ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ನಡೆದಿದೆ. ಇದಲ್ಲದೆ ಹಿರೇಬೂದಿ ಗ್ರಾಮಲೆಕ್ಕಿಗ ಸಿದ್ಧಾರ್ಥ ಸಿಂಗಾಡಿ ಅವರ ಮನೆಯ ಮೇಲೆ ಲೋಕಾಯುಕ್ತ ಜಿಲ್ಲಾ ಎಸ್ಪಿ ರವಿನಾಯಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬಾಗಲಕೋಟೆಯ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಮಲ್ಲಿಕಾರ್ಜುನ ನಾಯಿನೇಗಲಿ ಅವರ ನವನಗರ ಸೆಟ್ಟರ್ ನಲ್ಲಿರುವ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದು ಇಲ್ಲಿ ಭಾರೀ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕುಂದರಗಿಯಲ್ಲಿರುವ ಸಹಕಾರಿ ಮಂಡಲಿ ಅಧ್ಯಕ್ಷ ನಾಗಯ್ಯ ಹಿರೇಮಠ್ ಅವರ ಮನೆ ಜಾಲಾಡಿರುವ ಲೋಕಾ ಪೊಲೀಸರು ಅಕ್ರಮ ಆಸ್ತಿ ಬಯಲು ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಲಯದ ಅರಣ್ಯಾಧಿಕಾರಿ ಬಾಲಕೃಷ್ಣ ಅವರ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಇವರ ತೆಂಕಿಲ ಗ್ರಾಮದಲ್ಲಿರುವ ಮನೆ ಹಾಗೂ ಕಚೇರಿಯಲ್ಲಿ ತಪಾಸಣೆ ಕಾರ್ಯ ನಡೆದಿದೆ. ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ವಿಠ್ಠಲ್ ದಾಸ್ ಪೈ ನೇತೃತ್ವದಲ್ಲಿ ಅಧಿಕಾರಿಗಳು ಅಕ್ರಮ ಸಂಪಾದನೆಯ ಬಗ್ಗೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಇಲ್ಲಿ ಚಿನ್ನಾಭರಣಗಳು ಹಾಗೂ ವಿವಿಧೆಡೆ ನಿವೇಶನಗಳ ದಾಖಲೆ ಸಿಕ್ಕಿದೆ ಎಂದು ಹೇಳಲಾಗಿದೆ. ಅರಮನೆ ನಗರಿ ಮೈಸೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮಂಡ್ಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಅಣ್ಣೇಗೌಡ ಬಲೆಗೆ ಬಿದ್ದಿದ್ದಾರೆ. ಕುವೆಂಪು ನಗರದಲ್ಲಿರುವ ಮನೆಯಲ್ಲಿ ಬೆಳಗ್ಗಿನಿಂದಲೇ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಲೋಕಾಯುಕ್ತ ಎಸ್ಪಿ ನಾರಾಯಣ ನೇತೃತ್ವದಲ್ಲಿ ದಾಳಿ ನಡೆದಿದೆ.
ರಾಮನಗರ ಜಿಲ್ಲಾ ಲೋಕಾಯುಕ್ತ ಪೊಲೀಸರು ಬಿಡದಿ ಠಾಣೆಯ ಎ.ಎಸ್.ಐ ಜಗದೀಶ್ ಅವರ ತಲಘಟ್ಟಪುರ ಸಮೀಪದ ರಘುವನಹಳ್ಳಿಯಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಇವರು 40 ಮಳಿಗೆಗಳಿರುವ ದೊಡ್ಡ ಕಾಂಪ್ಲೆಕ್ಸ್ ಹೊಂದಿರುವುದು ದಾಳಿ ವೇಳೆ ಬಯಲಾಗಿದೆ.