ಪಾಟ್ನಾ : ಜಮ್ಮು-ಕಾಶ್ಮೀರದಲ್ಲಿ ಇಸ್ಲಾಮಿಕ್ ಉಗ್ರ ಸಂಘಟನೆ ಹಾಗೂ ಪಾಕಿಸ್ತಾನದ ಧ್ವಜ ಹಾರಾಡುತ್ತಿರುವ ಘಟನೆಗಳ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ಆತಂಕ ವ್ಯಕ್ತಪಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣಾ ಪೂರ್ವದಲ್ಲಿ ಮೋದಿ ನೀಡಿದ್ದ '56 ಇಂಚಿನ ಎದೆ' ಹೇಳಿಕೆಯನ್ನು ಕೆದಕಿರುವ ನಿತೀಶ್ ಕುಮಾರ್, ಕಾಶ್ಮೀರದಲ್ಲಿ ಪಾಕಿಸ್ತಾನ, ಇಸ್ಲಾಮಿಕ್ ಉಗ್ರರು ತಮ್ಮ ಧ್ವಜ ಹಾರಿಸುತ್ತಿದ್ದಾರೆ. ಈಗ 56 ಇಂಚಿನ ಎದೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ. ಚುನಾವಣೆಗೂ ಮುನ್ನ ಭರವಸೆಗಳನ್ನು ನೀಡಿದ್ದ ವ್ಯಕ್ತಿಗೆ ಏನಾಗಿದೆ ಎಂದು ಕೇಳಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಮೋದಿ, ಗುಜರಾತ್ ಮಾದರಿಯಲ್ಲಿ ಅಭಿವೃದ್ಧಿ ಮಾಡಲು 56 ಇಂಚಿನ ಎದೆ ಹೊಂದಿರಬೇಕು ಎಂದು ಹೇಳಿದ್ದರು. ಈ ಹೇಳಿಕೆಯನ್ನೇ ಮುಂದಿಟ್ಟುಕೊಂಡು, ಕಾಶ್ಮೀರದಲ್ಲಿ ಪಾಕಿಸ್ತಾನ, ಇಸ್ಲಾಮಿಕ್ ಉಗ್ರರ ಧ್ವಜ ಹಾರಾಟ ನಡೆಸಿದ್ದ ಪ್ರಕರಣದ ಬಗ್ಗೆ ಮೋದಿ ಸರ್ಕಾರದ ವಿರುದ್ಧ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಿರುವ ಬಿಜೆಪಿ ಕ್ರಮವನ್ನು ಖಂಡಿಸಿರುವ ನಿತೀಶ್ ಕುಮಾರ್, ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ, ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸಿದ್ಧಾಂತಗಳನ್ನು ಗಾಳಿಗೆ ತೂರಿದೆ ಎಂದು ಆರೋಪಿಸಿದ್ದಾರೆ.