BW News Bureau : ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್ ಸೂಚನೆ ನೀಡುತ್ತಿದ್ದಂತೆಯೇ ಇತ್ತ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲು ಅಂತಿಮ ಸಿದ್ಧತೆ ನಡೆಸಿದ್ದು, ಜುಲೈ 26ರಂದು ಮತದಾನ ಮತ್ತು 29ರಂದು ಮತ ಎಣಿಕೆ ನಡೆಯುವ ಸಾಧ್ಯತೆ ಇದೆ.
ಜುಲೈ ಅಂತ್ಯದೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಬೇಕು ಎಂಬುದು ಆಯೋಗದ ಆಶಯವಾಗಿದ್ದು, ಅದಕ್ಕೆ ಪೂರಕವಾಗಿ ಚುನಾವಣೆಗೆ ಸಿದ್ಧತೆ ನಡೆಸುವಂತೆ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ ಅವರು ಆಯೋಗದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಅಲ್ಲದೆ, ಚುನಾವಣೆ ನಡೆಸುವ ಕುರಿತು ಚರ್ಚಿಸಲು ಮಂಗಳವಾರ ಅಧಿಕಾರಿಗಳ ಸಭೆ ಕರೆದಿದ್ದಾರೆ. ಬಹುತೇಕ ಜುಲೈ 26ರಂದು ಮತದಾನ ಮತ್ತು 29ರಂದು ಮತ ಎಣಿಕೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಅಧಿಕಾರಿಗಳ ಸಭೆಯ ಬಳಿಕ ವೇಳಾಪಟ್ಟಿ ಅಂತಿಮಗೊಳಿಸಲಾಗುತ್ತದೆ ಎಂದು ಆಯೋಗದ ಮೂಲಗಳು ತಿಳಿಸಿವೆ.
ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಮುನ್ನ ರಾಜ್ಯ ಚುನಾವಣಾ ಆಯುಕ್ತರು ಹೈಕೋರ್ಟ್ ತೀರ್ಪನ್ನು ಸಂಪೂರ್ಣ ಅಧ್ಯಯನ ಮಾಡಲಿದ್ದಾರೆ. ಇದಾದ ಬಳಿಕ ವೇಳಾಪಟ್ಟಿ ಸಿದ್ಧಪಡಿಸಿ 2-3 ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.