ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಒತ್ತಾಯಿಸಿ ರಾಜ್ಯ ಬಿಜೆಪಿ ನಾಯಕರು ಬಡಾಲ ಅಂಕಲಗಿಯಿಂದ ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ.
ಕಬ್ಬಿನ ಬಾಕಿ ಹಣ ಬರದೆ ಆತ್ಮಹತ್ಯೆ ಮಾಡಿಕೊಂಡ ರೈತ ಗುರುನಾಥ ಚಾಪಗಾವಿ ಮನೆಯಿಂದ ಪಾದಾಯಾತ್ರೆ ಆರಂಭಿಸಲಾಯಿತು. ಈ ವೇಳೆ ಬಿಜೆಪಿ ನಾಯಕರು ರೈತನ ಕುಟುಂಬಕ್ಕೆ ಸಾಂತ್ವನ ಹೇಳಿ 2 ಲಕ್ಷ ರೂಪಾಯಿ ಪರಿಹಾರ ಧನ ನೀಡಿದರು.
ರಾಜ್ಯ ಸರ್ಕಾರದ ಕಣ್ಣು ತೆರೆಸಲು ರೈತನ ಮನೆಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಹೇಳಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್, ಸಂಸದ ಸುರೇಶ್ ಅಂಗಡಿ ,ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ ರವಿ ಸೇರಿದಂತೆ ಬಿಜೆಪಿ ಮುಖಂಡರು, ರೈತರು, ಕಾರ್ಯಕರ್ತರು ಪಾದಾಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಪಾದಯಾತ್ರೆ ಮೂಲಕ ಬಿಜೆಪಿ ನಾಯಕರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಪಾದಾಯಾತ್ರೆಯ ವೇಳೆ ಭಾರೀ ಪೊಲೀಸ್ ಬಂದೊಬಸ್ತ್ ಕೈಗೊಳ್ಳಲಾಗಿದೆ.