BW News Bureau : ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಶತಾಯ ಗತಾಯ ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರ ಅಂತಿಮ ಹೋರಾಟದ ಭಾಗವಾಗಿ ಇದೀಗ ಸುಪ್ರೀಂಕೋರ್ಟ್ನ ಮೊರೆ ಹೋಗಿದೆ.
2011ರ ಜನಗಣತಿ ಆಧಾರದ ಮೇಲೆ ಹೊಸ ಮೀಸಲಾತಿ ಪಟ್ಟಿ ತಯಾರಿಸಿ ಚುನಾವಣೆ ನಡೆಸಲು ಅವಕಾಶ ನೀಡಬೇಕು. ಇದಕ್ಕಾಗಿ ಚುನಾವಣೆ ನಡೆಸಲು ಸರ್ಕಾರಕ್ಕೆ ಇನ್ನಷ್ಟು ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಬಿಬಿಎಂಪಿ ಚುನಾವಣೆಗೆ ಚುನಾವಣಾ ಆಯೋಗವು ಈಗಾಗಲೇ ದಿನಾಂಕ ನಿಗದಿ ಪಡಿಸಿ ಘೋಷಣೆ ಕೂಡಾ ಮಾಡಿದೆ. ಆದರೆ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿರುವ ರಾಜ್ಯ ಸರ್ಕಾರ, 2001 ಮತ್ತು 2011ರ ಜನಗಣತಿಗೂ ಸಾಕಷ್ಟು ವ್ಯತ್ಯಾಸಗಳಿವೆ. ಕೆಲ ವಾರ್ಡ್ಗಳಲ್ಲಿ ಜನಸಂಖ್ಯೆಯಲ್ಲಿ ಅಪಾರ ಪ್ರಮಾಣದ ವ್ಯತ್ಯಾಸ ಕಂಡು ಬಂದಿದೆ. ಈಗ 2001 ಜನಗಣತಿ ಪ್ರಕಾರ ಮೀಸಲಾತಿ ನಿಗದಿಪಡಿಸಿರುವುದರಿಂದ ಹಲವು ವರ್ಗಗಳಿಗೆ ಅನ್ಯಾಯವಾಗಲಿದೆ. ಇದನ್ನು ಸರಿಪಡಿಸಲು 2011ರ ಜನಗಣತಿ ಪ್ರಕಾರ ಮೀಸಲಾತಿ ಪಟ್ಟಿಯನು ಪರಿಷ್ಕರಿಸಬೇಕಾಗಿದೆ. ಆದಕಾರಣ ಪರಿಷ್ಕೃತ ಮೀಸಲಾತಿ ಪಟ್ಟಿ ತಯಾರಿಸಿ ಚುನಾವಣೆ ನಡೆಸಲು ಅವಕಾಶ ನೀಡಿ ಸರ್ಕಾರಕ್ಕೆ ಇನ್ನಷ್ಟು ಕಾಲಾವಕಾಶ ನೀಡಬೇಕೆಂದು ಕೋರಿದೆ.