ಬೆಂಗಳೂರು : ತಮ್ಮ ಪುತ್ರನ ವಿರುದ್ಧದ 100 ಕೋಟಿ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪೊಲೀಸರ ತನಿಖೆಗೆ ತಾವು ಸಹಕಾರ ನೀಡುವುದಾಗಿ ತಿಳಿಸಿರುವ ಲೋಕಾಯುಕ್ತರು, ಸದ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಇಲ್ಲ ಎಂದು ತಿಳಿಸಿದ್ದಾರೆ.
ಲೋಕಾಯುಕ್ತದಲ್ಲೇ ತನಿಖೆ ಮಾಡಿದರೆ ಜನ ಸಾಮಾನ್ಯರಲ್ಲಿ ನಂಬಿಕೆ ಇರುವುದಿಲ್ಲ ಎಂಬ ಕಾರಣಕ್ಕೆ ನಾನು ಪ್ರಕರಣವನ್ನು ಸಿಸಿಬಿಗೆ ವಹಿಸಿದ್ದೆ. ಅಲ್ಲದೆ ವಿಶೇಷ ತನಿಖಾ ತಂಡ ರಚಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಭಾಸ್ಕರ್ ರಾವ್ ಹೇಳಿದ್ದಾರೆ.
ಇದುವರೆಗೂ ನಡೆದ ತನಿಖೆಗೆ ನಾನು ಯಾವುದೇ ಅಡ್ಡಿಪಡಿಸಿಲ್ಲ. ಪ್ರಕರಣದಲ್ಲಿ ನನ್ನ ಮಗ ಭಾಗಿಯಾಗಿದ್ದರೆ ಕಾನೂನು ಪ್ರಕಾರ ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ
ಈ ನಡುವೆ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ರಾಜೀನಾಮೆ ನೀಡಬೇಕು ಎಂದು ವಕೀಲರು ಆಗ್ರಹಿಸಿದ್ದು, ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಘೋಷಿಸಿದ್ದಾರೆ.