ಬೆಳಗಾವಿ : ಹತ್ತು ದಿನಗಳಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಧಿವೇಶನ ಶುಕ್ರವಾರ ಮಧ್ಯಾಹ್ನ ಅಂತ್ಯಗೊಂಡಿದೆ. ರಜೆಯ ಮೂಡಿನಲ್ಲಿದ್ದ ಬಹಳಷ್ಟು ಸಚಿವರು ಶಾಸಕರು ಅಧಿವೇಶನಕ್ಕೆ ಗೈರಾಗಿದ್ದರು.
ಶುಕ್ರವಾರದ ಅಧಿವೇಶನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ಚರ್ಚೆ ನಡೆಸಲಾಯಿತು. ಸೋಮವಾರ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ ಸ್ಪೀಕರ್ ಕಾಗೋಡು ತಿಮ್ಮಪ್ಪ, ಅಧಿವೇಶನವನ್ನು ಸೋಮವಾರ 11 ಗಂಟೆಗೆ ಮುಂದೂಡಲಾಗಿದೆ ಎಂದು ಘೋಷಿಸಿದರು.
ಬೆಳಗಾವಿ ಅಧಿವೇಶನದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಅಧಿವೇಶನ ತೃಪಿ ತಂದಿದೆ, ಸೋಮವಾರದಿಂದ ಬೆಂಗಳೂರಿನಲ್ಲಿ ಅಧಿವೇಶನ ಪ್ರಾರಂಭವಾಗಲಿದೆ ಎಂದರು. ಅಧಿವೇಶನಕ್ಕೆ ಸಚಿವರು, ಶಾಸಕರು ಗೈರಾಗುವುದು ಸರಿಯಲ್ಲ, ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಸಲಹೆ ಹೇಳಿದರು.
ಅಧಿವೇಶನದ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್, ಕಲಾಪದಲ್ಲಿ ಸಾಕಷ್ಟು ವಿಷಯಗಳು ಚರ್ಚೆಗೆ ಬಂದಿವೆ. ಬೆಟ್ಟಿಂಗ್ ಬಗ್ಗೆ ಚರ್ಚೆ ನಡೆಸಲು ಸ್ಪೀಕರ್ ಸೋಮವಾರ ಅವಕಾಶ ನೀಡಿದ್ದಾರೆ. ಸರ್ಕಾರವನ್ನು ಬಡಿದೆಬ್ಬಿಸುವ ಕೆಲಸವಾಗಿದೆ ಎಂದರು.
ಕಳೆದ 10 ದಿನಗಳಿಂದ ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿತ್ತು. ಸೋಮವಾರ ಬೆಳಿಗ್ಗೆ 11 ರಿಂದ ಬೆಂಗಳೂರಿನಲ್ಲಿ ಅಧಿವೇಶನ ಆರಂಭವಾಗಲಿದೆ.