ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಯ ಹಿನ್ನಲೆಯಲ್ಲಿ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಜುಲೈ ತಿಂಗಳ ಅಂತ್ಯದೊಳಗೆ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಅವರು ಹಾವೇರಿ ಜಿಲ್ಲೆಯ ಮೃತ ರೈತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ.
ರಾಜ್ಯ ಉಸ್ತುವಾರಿ ಚೆಲ್ಲಕುಮಾರ್ ಅವರು ಇತರ ರಾಜ್ಯಗಳಂತೆ ಕರ್ನಾಟಕದಲ್ಲೂ ಸಹ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಭೇಟಿ ನೀಡುವುದು ಉತ್ತಮ ಎಂದು ಎಐಸಿಸಿಗೆ ವರದಿ ನೀಡಿರುವುದರಿಂದ ರಾಹುಲ್ ಗಾಂಧಿ ಅವರು ರಾಜ್ಯ ಪ್ರವಾಸ ಕೈಗೊಳ್ಳುವುದು ಖಚಿತಪಟ್ಟಿದೆ ಎನ್ನಲಾಗಿದೆ.
ರಾಹುಲ ಗಾಂಧಿ ಅವರು ಹಾವೇರಿ ಜಿಲ್ಲೆಗೆ ಭೇಟಿ ನೀಡುವುದರಿಂದ, ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಅವರು ಮಂಗಳವಾರ ಜು.21 ರಂದು ಹಾವೇರಿ ಜಿಲ್ಲೆಯ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಭೇಟಿ ನೀಡಲಿದ್ದಾರೆ.ಈ ಭೇಟಿಯ ವೇಳೆ ಪರಮೇಶ್ವರ್ ಅವರು ರಾಹುಲ್ ಗಾಂಧಿ ಯಾವ ಗ್ರಾಮಕ್ಕೆ ಭೇಟಿ ನೀಡುವುದು ಸೂಕ್ತ ಎಂಬುದನ್ನು ನಿರ್ಧರಿಸಿ ಹೈಕಮಾಂಡ್ಗೆ ಮಾಹಿತಿ ನೀಡಲಿದ್ದಾರೆ. ಇದರ ಆಧಾರದ ಮೇಲೆ ರಾಹುಲ್ ಗಾಂಧಿ ಭೇಟಿ ನೀಡುವ ಗ್ರಾಮಗಳು ನಿರ್ಧಾರವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಪಕ್ಷ, ಸರ್ಕಾರ ಹಾಗೂ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂಬ ಕಾರಣಕ್ಕೆ ರಾಹುಲ್ ಗಾಂಧಿಯವರ ರಾಜ್ಯ ಪ್ರವಾಸ ತಡೆಯಲು ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹಾಗೂ ಕಾಂಗ್ರೆಸ್ ನಾಯಕರಿಂದ ನಡೆದ ಪ್ರಯತ್ನ ವಿಫಲವಾಗಿದೆ. ಆದರೆ, ಮಂಡ್ಯ ಜಿಲ್ಲೆ ಬದಲಿಗೆ ಹಾವೇರಿ ಜಿಲ್ಲೆಯನ್ನು ರಾಹುಲ್ ಗಾಂಧಿ ಭೇಟಿಗೆ ಆಯ್ಕೆ ಮಾಡಿಕೊಂಡಿದ್ದಾರೆ.