ನವದೆಹಲಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯ, ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಮತ್ತು ಇತರ ಮೂವರಿಗೆ ನೋಟಿಸ್ ಜಾರಿ ಮಾಡಿದೆ.
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಇಳವರಸಿ, ಶಶಿಕಲಾ ಹಾಗೂ ಸುಧಾಕರನ್ ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದಿಂದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನುಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಸೋಮವಾರ ನಡೆಸಿದೆ.
ಜಯಲಲಿತಾ ಹಾಗೂ ಅವರ ಸಹಚರರ ವಿರುದ್ಧ ಆದಾಯಕ್ಕೆ ಮೀರಿ ಆಸ್ತಿ ಸಂಗ್ರಹಿಸಿದ ಪ್ರಕರಣದ ವಿಚಾರಣೆ ರಾಜ್ಯಕ್ಕೆ ವರ್ಗಾವಣೆಗೊಂಡ ನಂತರ ತಾಂತ್ರಿಕವಾಗಿ ರಾಜ್ಯದ ಪರವಾಗಿ ಅಭಿಯೋಜಕರನ್ನು ನಿಯೋಜಿಸುವುದು ಹಾಗೂ ವಿಚಾರಣೆಗೆ ಪೂರಕವಾಗಿರುವ ಜವಾಬ್ದಾರಿ ನಿರ್ವಹಣೆ ಕರ್ನಾಟಕಕ್ಕೆ ಅನಿವಾರ್ಯವಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಜಯಲಲಿತಾ ಅವರ ವಿರುದ್ಧ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಜಯಲಲಿತಾ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇ 11ರಂದು ರಾಜ್ಯ ಉಚ್ಛ ನ್ಯಾಯಾಲಯ ಜಯಲಲಿತಾ ಪರ ತೀರ್ಪು ನೀಡಿತ್ತು. ನಂತರ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದ ಜಯಲಲಿತಾ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.