ನವದೆಹಲಿ : ಎರಡು ವಾರಗಳ ಸಂಸತ್ತಿನ ಅಧಿವೇಶನ ವ್ಯರ್ಥವಾಗಿ ಕಳೆದು ಹೋದ ಹಿನ್ನಲೆಯಲ್ಲಿ, ಸರ್ಕಾರ ಈ ಕಂಗ್ಗಂಟಿಗೆ ತೆರೆ ಎಳೆಯುವ ಪ್ರಯತ್ನವಾಗಿ ಸೋಮವಾರ ಸರ್ವಪಕ್ಷಗಳ ಸಭೆ ಕರೆದಿದೆ.
ಇದಕ್ಕೂ ಮೊದಲು ಬೆಳಗ್ಗೆ 10:30 ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಸಚಿವರನ್ನು ಭೇಟಿ ಮಾಡಲಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆಕೊಡಬೇಕೆಂದು ಸಲಹೆ ನೀಡುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
ಭಾನುವಾರ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಅವರು ಮಾತನಾಡಿ, ಪ್ರತಿಪಕ್ಷಗಳು ಚರ್ಚೆಗೆ ಅವಕಾಶ ನೀಡಿದರೆ, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಮಾತನಾಡಬಹುದು ಎಂದು ಹೇಳಿದ್ದರು.
ಲಲಿತ್ ಗೇಟ್ ಹಗರಣದ ಸಂಬಂಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ವಸುಂಧರಾ ರಾಜೇ ಮತ್ತು ವ್ಯಾಪಂ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಶಿವರಾಜ್ ಸಿಂಗ್ ಚೌಹಾಣ್ ರಾಜೀನಾಮೆಗೆ ಕಳೆದ ಎರಡು ವಾರಗಳಿಂದ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ.