ನವದೆಹಲಿ : ಸರ್ಕಾರದ ಯಾವುದೇ ಜನಕಲ್ಯಾಣ ಯೋಜನೆಗಳಿಗೆ ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸುವಂತಿಲ್ಲ ಮತ್ತು ಆಧಾರ್ ಕಾರ್ಡ್ ಹೊಂದಿರುವವರ ವೈಯಕ್ತಿಕ ಮಾಹಿತಿಗಳನ್ನು ಬಹಿರಂಗಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.
ನ್ಯಾಯಾಧೀಶ ಚೆಲಮೇಶ್ವರ ಅವರ ನೇತೃತ್ವದ ನ್ಯಾಯಪೀಠ ಕೆಲವು ಮಾರ್ಗಸೂಚಿಗಳನ್ನು ನೀಡಿ, ಕೇಂದ್ರ ಸರಕಾರ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎನ್ನುವ ಬಗ್ಗೆ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ನೀಡಬೇಕೆಂದು ಹೇಳಿದೆ.
ಪಡಿತರ ಮತ್ತು ಸೀಮೆಎಣ್ಣೆ ಮತ್ತು ಅಡುಗೆ ಅನಿಲ ಸಿಲಿಂಡರ್ (ಎಲ್ ಪಿ ಜಿ) ವಿತರಣೆಗೆ ಹೊರತು ಬೇರೆ ಯೋಜನೆಗಳಿಗೆ ಆಧಾರ್ ಅನ್ನು ಬಳಸುವಂತಿಲ್ಲ ಎಂದು ಹೇಳಿದೆ.
ಆದರೆ ಪಡಿತರ ಮತ್ತು ಸೀಮೆಎಣ್ಣೆ ಮತ್ತು ಅಡುಗೆ ಅನಿಲ ಸಿಲಿಂಡರ್ ವಿತರಣೆಗೆ ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ನ್ಯಾಯಾಲಯದ ಅನುಮತಿ ಪಡೆದು ಕ್ರಿಮಿನಲ್ ತನಿಖೆಗೆ ಹೊರತುಪಡಿಸಿ ಇನ್ನು ಯಾವುದೇ ಕಾರಣಕ್ಕೂ ಆಧಾರ್ ಹೊಂದಿರುವವರ ವೈಯಕ್ತಿಕ ಮಾಹಿತಿಯನ್ನು ಬಳಸಿಕೊಳ್ಳಬಾರದು ಎಂದಿದೆ.