ನವದೆಹಲಿ : ಹೆದ್ದಾರಿಗಳಲ್ಲಿ ಟೋಲ್ ರದ್ದುಗೊಳಿಸಿ ವಾರ್ಷಿಕ ಟೋಲ್ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಲಾರಿ ಮಾಲೀಕರು ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಸುಮಾರು 9 ಲಕ್ಷ ಲಾರಿಗಳ ಓಡಾಟ ಗುರುವಾರದಿಂದ ಸ್ಥಗಿತಗೊಳ್ಳಲಿದೆ.
ವಾರ್ಷಿಕ ಟೋಲ್ ಪಾವತಿಸುವ ವ್ಯವಸ್ಥೆ ಜಾರಿಗೆ ತರುವಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜತೆ ಬುಧವಾರ ನಡೆಸಿದ ಮಾತುಕತೆ ವಿಫಲವಾದುದ್ದರಿಂದ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಲಾರಿ ಮಾಲೀಕರು ಮತ್ತು ಏಜೆಂಟರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಹೇಳಿದ್ದಾರೆ.
ಈ ಮಧ್ಯೆ ಮುಷ್ಕರಕ್ಕೆ ಟೂರಿಸ್ಟ್ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಮಾಲೀಕರ ಸಂಘಟನೆಗಳೂ ಬೆಂಬಲ ಸೂಚಿಸಿದ್ದು, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ಗಳೂ ರಸ್ತೆಗಿಳಿಯುವುದಿಲ್ಲ ಎಂದು ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಹೇಳಿದ್ದಾರೆ. ಆದರೆ, ಗುರುವಾರ ಮಧ್ಯಾಹ್ನದ ಬಳಿಕ ಸಂಚಾರ ಸ್ಥಗಿತಗೊಳಿಸುವ ಕುರಿತು ನಿರ್ಧರಿಸುವುದಾಗಿ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಸಂಘಟನೆಗಳ ಮುಖಂಡರು ಹೇಳಿದ್ದಾರೆ.
ಮುಷ್ಕರದಿಂದ ಹಾಲು, ತರಕಾರಿ, ಔಷಧ ಮತ್ತಿತರ ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಪೂರೈಕೆಯಲ್ಲೂ ಯಾವುದೇ ವ್ಯತ್ಯಯವಾಗುವುದಿಲ್ಲ.