ಮುಂಬೈ : 2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.
ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬುಧವಾರ ಬಾಂಬೆ ಹೈಕೋರ್ಟ್ ಗೆ ತಿಳಿಸಿದೆ.
ಡಿ. 10ರ ಬಾಂಬೆ ಹೈಕೋರ್ಟ್ ನ ಆದೇಶವನ್ನು ಸರ್ಕಾರ ಅಧ್ಯಯನ ಮಾಡುತ್ತಿದೆ, ನಂತರ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂದು ನಿರ್ಧರಿಸಲಾಗುವುದು ಎಂದು ಸೋಮವಾರ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದರು.
ಡಿ. 10 ರಂದು ಬಾಂಬೆ ಹೈಕೋರ್ಟ್ ಸಲ್ಮಾನ್ ಖಾನ್ ನನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಸಿ ತೀರ್ಪು ನೀಡಿತ್ತು.
2002ರ ಸೆಪ್ಟೆಂಬರ್ 28ರಂದು ಬಾಂದ್ರಾದಲ್ಲಿರುವ ಬೇಕರಿ ಹೊರಗಿನ ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಸಲ್ಮಾನ್ ಖಾನ್ ಕಾರು ಹರಿದು ಓರ್ವ ವ್ಯಕ್ತಿ ಸಾವನ್ನಪ್ಪಿ ಇತರರ ನಾಲ್ವರಿಗೆ ಗಾಯಗಳಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಸಲ್ಮಾನ್ ಖಾನ್ ನನ್ನು ದೋಷಿ ಎಂದು ತೀರ್ಪು ನೀಡಿ, ಐದು ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಅದೇ ದಿನ ಹೈಕೋರ್ಟ್ ನಿಂದ ಸಲ್ಮಾನ್ ಖಾನ್ ಗೆ ಜಾಮೀನು ಸಿಕ್ಕಿತ್ತು. ಬಳಿಕ ಕೆಳ ಕೋರ್ಟ್ ನ ತೀರ್ಪನ್ನು ಪ್ರಶ್ನಿಸಿ ಸಲ್ಮಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದರು.