ಬೆಂಗಳೂರು : ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆ.13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುವುದಿಲ್ಲ.
ಬೀದರ್, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಹೈಕೋರ್ಟ್ನ ಕಲಬುರಗಿ ಪೀಠ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 26 ಜಿಲ್ಲಾ ಪಂಚಾಯ್ತಿ ಮತ್ತು 175 ತಾಲೂಕು ಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ ಅವರು ಸೋಮವಾರ ಸಂಜೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಹೇಳಿದ್ದಾರೆ.
ಮೊದಲ ಹಂತದಲ್ಲಿ 15 ಜಿಲ್ಲೆಗಳ 15 ಜಿಲ್ಲಾ ಪಂಚಾಯ್ತಿಯ 552 ಕ್ಷೇತ್ರಗಳು ಮತ್ತು ತಾಲೂಕು ಪಂಚಾಯಿತಿಗಳ 1,945 ಕ್ಷೇತ್ರಗಳಿಗೆ ಮತ್ತು ಎರಡನೇ ಹಂತದಲ್ಲಿ 15 ಜಿಲ್ಲೆಗಳ 13 ಜಿಲ್ಲಾ ಪಂಚಾಯಿತಿಯ 370 ಕ್ಷೇತ್ರಗಳು ಮತ್ತು 15 ಜಿಲ್ಲೆಗಳ ಎಲ್ಲಾ ತಾಲೂಕು ಪಂಚಾಯಿತಿಗಳ 1939 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಜ.25ರಂದು ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗುತ್ತದೆ. ಫೆ.1 ನಾಮಪತ್ರ ಸಲ್ಲಿಸಲು ಕಡೆಯ ದಿನ. ಫೆ.2ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಫೆ.4 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ. ಫೆ.13ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಅಗತ್ಯವಿದ್ದರೆ ಮರು ಮತದಾನಕ್ಕೆ ಫೆ.15ರ ದಿನಾಂಕ ನಿಗದಿಪಡಿಸಲಾಗಿದೆ.
ಎರಡನೇ ಹಂತದ ಚುನಾವಣೆ ನಡೆಯಲಿರುವ ಜಿಲ್ಲೆಗಳಲ್ಲಿ ಫೆ.1ರಂದು ಆಯಾ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗುತ್ತದೆ. ಫೆ.8 ನಾಮಪತ್ರ ಸಲ್ಲಿಸಲು ಕಡೆಯ ದಿನ. ಫೆ.9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಫೆ.11 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ. ಫೆ.20 ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಅಗತ್ಯವಿದ್ದರೆ ಮರು ಮತದಾನಕ್ಕೆ ಫೆ.22ರ ದಿನಾಂಕ ನಿಗದಿಪಡಿಸಲಾಗಿದೆ.
ಎರಡೂ ಹಂತದ ಚುನಾವಣೆಗಳ ಮತ ಎಣಿಕೆ ಆಯಾ ತಾಲೂಕು ಕೇಂದ್ರಗಳಲ್ಲಿ ಫೆ.23ರಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಚುನಾವಣೆಗೆ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸುತ್ತಿರುವುದರಿಂದ ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಫೆ. 24ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.