ಬೆಂಗಳೂರು : ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ಮುಗಿಯುತ್ತಿದ್ದು, ಮುಂದಿನ ಒಂದು ವಾರದಲ್ಲಿ ರಾಜ್ಯ ಬಿಜೆಪಿ ಘಟಕದ ಹೊಸ ಅಧ್ಯಕ್ಷರ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಮುಗಿಯುತ್ತಿದ್ದು, ಹೊಸ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಬೇಕಿದೆ.
ಇತ್ತೀಚೆಗೆ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಗೆದ್ದಿದ್ದು ಪಕ್ಷದಲ್ಲಿ ಹೊಸ ಚಟುವಟಿಕೆಗಳು ಪ್ರಾರಂಭವಾಗಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷರನ್ನು ಆದಷ್ಟು ಬೇಗ ಆಯ್ಕೆ ಮಾಡುವ ನಿರೀಕ್ಷೆ ಇದೆ. ಈ ಕುರಿತು ರಾಜ್ಯ ಕೋರ್ ಕಮಿಟಿ ಜೊತೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮಂಗಳವಾರ (ಫೆ.23) ರಂದು ಮಾತುಕತೆ ನಡೆಸುವ ಸಾಧ್ಯತೆ ಇದೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಹೆಸರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದು, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ ಮತ್ತು ಸಿ ಟಿ ರವಿ ಹೆಸರೂ ಕೂಡ ಕೇಳಿ ಬರುತ್ತಿದೆ. ಆದರೆ ಆರ್ ಅಶೋಕ ಲಿಂಗಾಯತರ ವಿರೋಧಿ ಎಂಬ ಹಣೆಪಟ್ಟಿಯನ್ನು ಬಿಬಿಎಂಪಿ ಚುನಾವಣೆ ಸಮಯದಲ್ಲಿ ಕಟ್ಟಿಕೊಂಡಿರುವ ಕಾರಣ, ಇದೇ ಅವರಿಗೆ ತೊಡಕಾಗಬಹುದು.
ಬೇರೆ ಮೂಲಗಳ ಪ್ರಕಾರ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಅಧ್ಯಕ್ಷರನ್ನಾಗಿಸಿ, ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿ, ಸಂಘಟನೆಯನ್ನೂ ತಮ್ಮ ಕೈನಲ್ಲಿ ಉಳಿಸಿಕೊಳ್ಳುವ ಹಾಗೂ ಜನನಾಯಕರಾಗಿರುವ ಬಿ.ಎಸ್.ವೈ ನೇತೃತ್ವದಲ್ಲಿ ಚುನಾವಣೆ ಎದುರಿಸುವ ನಿರ್ಧಾರವನ್ನು ಬಿಜೆಪಿ ನಾಯಕರು ತೆಗೆದುಕೊಳ್ಳಬಹುದು.
ಈ ಎಲ್ಲಾ ಕಾರಣಗಳಿಂದ, ಮಂಗಳವಾರ (ಫೆ.23) ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕರೆದಿರುವ ರಾಜ್ಯ ನಾಯಕರ ಸಭೆ ಕುತೂಹಲ ಹೆಚ್ಚಿಸಿದೆ. ಮಂಗಳವಾರದ ಸಭೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಚರ್ಚೆ ನಡೆದರೂ ನಿರ್ದಿಷ್ಟ ವ್ಯಕ್ತಿಯ ಕುರಿತು ಚರ್ಚೆಯಾಗುವ ಸಾಧ್ಯತೆ ಕಡಿಮೆಯಾಗಿದೆ. ಈ ಹಿಂದಿನಂತೆ, ಒಬ್ಬೊಬ್ಬ ನಾಯಕರನ್ನೂ ವೈಯಕ್ತಿಕವಾಗಿ ಭೇಟಿ ನಡೆಸುವ ಅಮಿತ್ ಷಾ, ಅಂತಿಮವಾಗಿ ಪ್ರಧಾನಿ ಹಾಗೂ ಆರೆಸ್ಸೆಸ್ ಪ್ರಮುಖರೊಂದಿಗೆ ಚರ್ಚಿಸಿ ತಮ್ಮ ನಿರ್ಧಾರ ಪ್ರಕಟಿಸಬಹುದು