ಬೆಂಗಳೂರು : ಗುರುವಾರ ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ, ಶುಕ್ರವಾರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಾದ್ಯಂತ ಬಂದ್ ಆಚರಿಸಲಾಗುತ್ತಿದೆ.
ಶಾಶ್ವತ ನೀರಾವರಿ ಹೋರಾಟ ಸಮಿತಿ ಬಂದ್ ಗೆ ಕರೆ ನೀಡಿದ್ದು ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಎರಡೂ ಜಿಲ್ಲೆಗಳಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೋಲಾರದ ಕೆಲವೆಡೆ ಸರ್ಕಾರಿ ಬಸ್ಗಳ ಮೇಲೆ ಕಲ್ಲುತೂರಾಟ ನಡೆಸಲಾಗಿದೆ.
ರಸ್ತೆ ಮಧ್ಯದಲ್ಲೇ ಪ್ರತಿಭಟನಾ ನಿರತರು ಟಯರ್ಗಳಿಗೆ ಬೆಂಕಿ ಹಚ್ಚಿರುವುದರಿಂದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಗುರುವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ವಿವಿಧೆಡೆಯಿಂದ ರೈತರು ಟ್ರ್ಯಾಕ್ಟರ್ಗಳಲ್ಲಿ ಬೆಂಗಳೂರಿನತ್ತ ಧಾವಿಸಿದ್ದರು. ಟ್ರ್ಯಾಕ್ಟರ್ಗಳು ಮೇಖ್ರಿ ಸರ್ಕಲ್ನಿಂದ ವಿಂಡ್ಸರ್ ಮ್ಯಾನರ್ ಕಡೆಗೆ ಬರುತ್ತಿದ್ದಾಗ ಬ್ಯಾರಿಕೇಡ್ ಹಾಕಿ ತಡೆಯಲಾಗಿತ್ತು. ಇದರಿಂದ ಆಕ್ರೋಶಗೊಂಡ ರೈತರು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಈ ವೇಳೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ಗೆ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.