ಬೆಂಗಳೂರು : ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್ ಅವರ 125ನೇ ಜನ್ಮ ದಿನಾಚರಣೆ ದಿನವಾದ ಗುರುವಾರ ಅಧಿಕಾರ ಸ್ವೀಕರಿಸಿದರು.
ಬೆಳಗ್ಗೆ 9.30ಕ್ಕೆ ನಗರದ ಶೇಷಾದ್ರಿಪುರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆಭೇಟಿ ನೀಡಿ ಆಶೀರ್ವಾದ ಪಡೆದರು. ಅನಂತರ ಪಕ್ಷದ ಕಚೇರಿ ಜಗನ್ನಾಥ ಭವನಕ್ಕೆ ಪ್ರವೇಶಿಸಿದರು. ಬೆಳಗ್ಗೆ 11.15ಕ್ಕೆ ಅಧ್ಯಕ್ಷರ ಕೊಠಡಿಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಪ್ರಹ್ಲಾದ್ ಜೋಷಿ ಅವರಿಂದ ಪಕ್ಷದ ಧ್ವಜ ಹಸ್ತಾಂತರ, ಆಸನಾ ರೂಢ ಕಾರ್ಯಕ್ರಮ ನಡೆಯಿತು. ಈ ವೇಳೆ 5ಕ್ಕೂ ಹೆಚ್ಚು ಪುರೋಹಿತರು ಉಪಸ್ಥಿತರಿದ್ದರು ಮಂತ್ರ ಮಠಣ, ಧಾರ್ಮಿಕ ವಿಧಿವಿಧಾನಗಳಂತೆ ಪೂಜೆ ನಡೆಸಿದರು.
ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಸಾಮರಸ್ಯ ಸಮಾವೇಶ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಗುರಿ ಈಡೇರಿಸುತ್ತೇನೆ ಎಂದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಎಸ್ ವೈ, ರಾಜ್ಯದಲ್ಲಿ ಬರ ಪರಿಹಾರದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ಅಲ್ಲದೆ ಮುಂದಿನ ಒಂದು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರದ ಎಲ್ಲಾ ಹಗರಣಗಳನ್ನು ಬಯಲಿಗೇಳೆಯುವುದಾಗಿ ಗುಡುಗಿದ್ದಾರೆ.
ಇನ್ನು ಕೆಲವು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಬೇಕಾಗಿದ್ದು, ಇದಕ್ಕಾಗಿ ಪಕ್ಷದ ನಾಯಕರು ಹಾಗೂ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು. ಅಲ್ಲದೆ ಪಕ್ಷದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದನ್ನು ಸಹಿಸಿಕೊಳ್ಳುವುದಿಲ್ಲ ಎಂದು ಸಹ ಬಿಎಸ್ ವೈ ಎಚ್ಚರಿಸಿದರು.