ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.
ಈ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿರುವುದಾಗಿ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ಯಡಿಯೂರಪ್ಪ ವಿರುದ್ಧದ 16 ಪ್ರಕರಣಗಳ ಪೈಕಿ 15 ಪ್ರಕರಣಗಳ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣಗಳು ಕೆಲವು ಕಾರಣಗಳಿಂದಾಗಿ ರಾಜ್ಯ ಹೈಕೋರ್ಟ್ ನಲ್ಲಿ ರದ್ದಾಗಿವೆ. ಹಾಗಾಗಿ ಬಿ.ಎಸ್.ವೈ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಂಪುಟ ಸಭೆ ಒಪ್ಪಿಗೆ ನೀಡಿರುವುದಾಗಿ ವಿವರಿಸಿದರು.
ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಎಎಜಿ ಪೊನ್ನಣ್ಣ ಅವರು ವರದಿ ಸಲ್ಲಿಸಿದ್ದರು. ಅಲ್ಲದೇ ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ ಎಎಜಿ ಸಭೆಯಲ್ಲಿ ವಿವರಣೆ ನೀಡಿದ್ದರು. ಈ ನಿಟ್ಟಿನಲ್ಲಿ ಯಡಿಯೂರಪ್ಪ ವಿರುದ್ಧದ ಪ್ರಕರಣಗಳಿಗೆ ಮರುಜೀವ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.