ಡೆಹ್ರಾಡೂನ್ : ಉತ್ತರಾಖಂಡ್ ನಲ್ಲಿ ಹೇರಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿ ನೈನಿತಾಲ್ ಹೈಕೋರ್ಟ್ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಕುರಿತು ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ನ್ಯಾಯಾಲಯ, ಒಂದು ವೇಳೆ ಈಗ ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ಹಿಂಪಡೆದು ಮತ್ತೊಬ್ಬರಿಗೆ ಸರ್ಕಾರ ರಚಿಸಲು ಅವಕಾಶ ನೀಡಿದರೆ ನ್ಯಾಯದ ಅವಹೇಳನ ಮಾಡಿದಂತೆ. ರಾಷ್ಟ್ರಪತಿಯೂ ತಪ್ಪು ಮಾಡಬಹುದು. ಅಲ್ಲದೇ ಎಲ್ಲಾ ನಿರ್ಧಾರಗಳು ನ್ಯಾಯಾಂಗ ವಿಮರ್ಶೆಗೆ ಒಳಪಡಲಿದೆ ಎಂದು ಹೈಕೋರ್ಟ್ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಹಾಗೂ ನ್ಯಾಯಮೂರ್ತಿ ವಿ.ಕೆ.ಬಿಸ್ಟ್ ಅವರನ್ನೊಳಗೊಂಡ ನ್ಯಾಯಪೀಠ, ಹರೀಶ್ ರಾವತ್ ಅವರ ಮನವಿಯನ್ನು ಪುರಸ್ಕರಸಿ, ಏಪ್ರಿಲ್ 29ರಂದು ವಿಧಾನಸಭೆಯಲ್ಲಿ ವಿಶ್ವಾಸಮತಯಾಚಿಸುವಂತೆ ಹರೀಶ್ ರಾವತ್ ಗೆ ಸೂಚಿಸಿದೆ.
ಉತ್ತರಾಖಂಡ್ ನಲ್ಲಿ ಮುಖ್ಯಮಂತ್ರಿ ಹರೀಶ್ ರಾವತ್ ನೇತೃತ್ವದ ಕಾಂಗ್ರೆಸ್ ಸರ್ಕಾರದ 9 ಮಂದಿ ಕೈ ಶಾಸಕರು ಬಂಡಾಯ ಎದ್ದು ಬಿಜೆಪಿ ಜೊತೆ ಕೈಜೋಡಿಸಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಶಿಫಾರಸು ಮಾಡಿತ್ತು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರಪತಿ ಆಳ್ವಿಕೆಗೆ ಅಂಕಿತ ಹಾಕಿದ್ದರು.
ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಹರೀಶ್ ರಾವತ್ ಅವರು, ಹೈಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಇದು ಉತ್ತರಾಖಂಡ್ ಜನತೆಗೆ ಸಿಕ್ಕ ಜಯ ಎಂದು ಹೇಳಿದ್ದಾರೆ.