ನವದೆಹಲಿ : ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಪಟ್ಟಂತೆ ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ, ಮುಚ್ಚಿಡುವುದಿಲ್ಲ. ಯಾವುದಕ್ಕೂ ಹೆದರುವುದೂ ಇಲ್ಲಾ ಎಂದು ಕಾಂಗೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ನನ್ನ ವಿರುದ್ಧ ಆರೋಪಿಸುತ್ತಿವೆ. ನಾನು ಅದ್ಯಾವುದಕ್ಕೂ ಹೆದರೋದಿಲ್ಲ. ನನ್ನ ಮೇಲಿನ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದದ್ದು ಎಂದರು.
ಆಗಸ್ಟಾ ವೆಸ್ಟ್ ಲ್ಯಾಂಡ್ ಖರೀದಿ ಹಗರಣದ ಕುರಿತಂತೆ ಕಳೆದ 2 ವರ್ಷಗಳಿಂದ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿರುವ ಸೋನಿಯಾ, ತನಿಖೆಯನ್ನು ಕೂಡಲೇ ನಿಷ್ಪಕ್ಷಪಾತವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.
ರಾಜ್ಯಸಭೆ ಕಲಾಪದಲ್ಲಿ, ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಸೋನಿಯಾ ಗಾಂಧಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೇ ಹಗರಣ ಸಂಬಂಧ ಕೇಳಿಬಂದಿದ್ದ ಎಲ್ಲ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಪ್ರಸ್ತಾಪಿಸಿದರು.
ಈ ವೇಳೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು ಸುಬ್ರಮಣಿಯನ್ ಸ್ವಾಮಿಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ ಸುಗಮ ಕಲಾಪಕ್ಕೆ ಕಾಂಗ್ರೆಸ್ ಸದಸ್ಯರು ಅಡ್ಡಿ ಪಡಿಸಿದ ಹಿನ್ನಲೆಯಲ್ಲಿ ಕಲಾಪ ಆರಂಭವಾಗ ಕೇವಲ ಒಂದು ಗಂಟೆ ಅವಧಿಯಲ್ಲಿ ಕಲಾಪವನ್ನು ಎರಡೆರಡು ಬಾರಿ ಮುಂದೂಡಲಾಯಿತು. ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು, ತಮ್ಮ ವಿರುದ್ಧ ಎಲ್ಲ ಆರೋಪಗಳನ್ನು ತಳ್ಳಿಹಾಕಿದ್ದಾರೆ.