ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ 28 ಸಚಿವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ನೀಡಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ, ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ.ಶಶಿಧರ್ ದೂರು ದಾಖಲಿಸಿದ್ದಾರೆ. ಪೊಲೀಸ್ ವರ್ಗಾವಣೆಯಲ್ಲಿ ಕಾನೂನು ಉಲ್ಲಂಘಿಸಲಾಗುತ್ತಿದ್ದು, ಅಕ್ರಮವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಸಿಎಂ ಸೇರಿದಂತೆ 28 ಸಚಿವರು ಶಿಫಾರಸ್ಸು ಪತ್ರ ನೀಡಿದ್ದಾರೆ. ಇವರೆಲ್ಲರೂ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಶಿಫಾರಸ್ಸು ಪತ್ರ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಜಯಚಂದ್ರ, ಸತೀಶ್ ಜಾರಕಿಹೊಳಿ, ಕೃಷ್ಣ ಭೈರೇಗೌಡ, ಖಮ್ಮರುಲ್ ಇಸ್ಲಾಂ, ಎಸ್.ಆರ್.ಪಾಟೀಲ್, ಎಚ್.ಕೆ. ಪಾಟೀಲ್, ಕಿಮ್ಮನೆ ರತ್ನಾಕರ್, ದಿನೇಶ್ ಗುಂಡೂರಾವ್, ಶ್ರೀನಿವಾಸ್ ಪ್ರಸಾದ್, ಶಾಮನೂರು ಶಿವಶಂಕರಪ್ಪ, ಪರಮೇಶ್ವರ್ ನಾಯಕ್, ರಮಾನಾಥ್ ರೈ, ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಉಮಾಶ್ರೀ, ಯು.ಟಿ.ಖಾದರ್, ಎಚ್.ಸಿ.ಮಹಾದೇವಪ್ಪ, ಬಾಬೂರ್ವ್ ಚಿಂಚನಸೂರ್, ಎಚ್.ಆಂಜನೇಯ, ಅಭಯಚಂದ್ರ ಜೈನ್, ಡಿ.ಕೆ.ಶಿವಕುಮಾರ್, ವಿನಯ್ ಕುಲಕರ್ಣಿ, ಶರಣು ಪ್ರಕಾಶ್ ಪಾಟೀಲ್, ಮಹಾದೇವ ಪ್ರಸಾದ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಅಂಬರೀಶ್, ವಿನಯ್ ಕುಮಾರ್ ಸೊರಕೆ ಸೇರಿದಂತೆ 28 ಸಚಿವರ ವಿರುದ್ಧ ದೂರು ದಾಖಲಿಸಲಾಗಿದೆ.
ಈ ಬಗ್ಗೆ ಮಾತನಾಡಿರುವ ಸಹಕಾರ ಸಚಿವ ಎಚ್.ಎಸ್. ಮಹದೇವ ಪ್ರಸಾದ್ ಅವರು, ಕಾನೂನು ಪ್ರಕಾರ ವರ್ಗಾವಣೆ ಮಾಡಿ ಅಂತ ಶಾಸಕರು, ಸಚಿವರು ಶಿಫಾರಸು ಪತ್ರ ಕೊಡುವುದು ಸಾಮಾನ್ಯ. ಶಿಫಾರಸು ಪತ್ರವನ್ನೂ ಕೊಡಬಾರದು ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.