ದಾವಣಗೆರೆ : ಕೇಂದ್ರ ಎನ್.ಡಿ.ಎ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 29ರಂದು ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಗೆ ಆಗಮಿಸಲಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಖಾತೆ ರಾಜ್ಯ ಸಚಿವ ಜಿ.ಎಂ.ಸಿದ್ದೇಶ್ವರ್ ಈ ಮಾಹಿತಿ ನೀಡಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ (ಎಲ್ಪಿಜಿ) ಸಂಪರ್ಕ ನೀಡುವ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜನ ಪರ್ವ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮೇ 29ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಆ ವೇಳೆ ಮೋದಿ ಅವರು ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದು, ಸುಮಾರು ಒಂದು ಲಕ್ಷ ಜನರನ್ನು ಸೇರಿಸಲಾಗುವುದು ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಎರಡು ವರ್ಷಗಳನ್ನು ಪೂರೈಸುತ್ತಿರುವ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದೇಶದ ವಿವಿಧ ರಾಜ್ಯಗಳಿಗೆ 63 ಸಚಿವರು ಭೇಟಿ ನೀಡಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲಿದ್ದಾರೆ ಎಂದರು.