ಬೆಂಗಳೂರು : ಬೆಂಗಳೂರನ್ನು ಸ್ಮಾರ್ಟ್ ಸಿಟಿ ಯೋಜನೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಈಗ ತನ್ನ ನಿಲುವನ್ನು ಬದಲಿಸಿದ್ದು, ರಾಜ್ಯದ ರಾಜಧಾನಿಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವಕಾಶ ನೀಡಿದೆ.
ಸ್ಮಾರ್ಟ್ ಸಿಟಿ ಯೋಜನೆಗೆ ರೂಪಿಸಲಾಗಿದ್ದ ನಿಯಮಗಳಿಗೆ ಒಳಪಡಲು ಬೆಂಗಳೂರು ವಿಫಲ ವಾಗಿದ್ದರಿಂದ ರಾಜ್ಯ ಸರ್ಕಾರ ಹೆಸರನ್ನು ಕೇಂದ್ರಕ್ಕೆ ಕಳುಹಿಸಿಕೊಟ್ಟಿರಲಿಲ್ಲ. ಆದರೆ ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು ರಾಜ್ಯ ರಾಜಧಾನಿಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ ನಿಯಮ ಸಡಿಲಿಸಿರುವ ಇಲಾಖೆ, ಬಿಹಾರದ ರಾಜಧಾನಿ ಪಾಟ್ನಾ, ಹಿಮಾಚಲ ಪ್ರದೇಶದ ಶಿಮ್ಲಾ, ಛತ್ತೀಸ್ಗಢದ ನ್ಯೂ ರಾಯಪುರ, ಅರುಣಾಚಲಪ್ರದೇಶದ ಇಟಾನಗರ, ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿ ಮತ್ತು ಕೇರಳದ ತಿರುವನಂತಪುರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಪಾಲ್ಗೊಳ್ಳುವಂತೆ ನಿರ್ದೇಶನ ನೀಡಿದೆ.
ಬೆಂಗಳೂರು ನಗರದ ಯಾವುದಾದರೂ ಒಂದು ಭಾಗವನ್ನು ಮಾತ್ರ ಸ್ಪರ್ಧೆಗೆ ಆಯ್ದುಕೊಳ್ಳಬಹುದು ಎಂದು ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಸ್ಮಾರ್ಟ್ ಸಿಟಿಯ ಮೊದಲನೇ ಹಂತದ ಪಟ್ಟಿಯಲ್ಲಿ ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ತುಮಕೂರು ಹಾಗೂ ಮಂಗಳೂರನ್ನೂ ಸ್ಮಾರ್ಟ್ಸಿಟಿ ಯೋಜನೆಗೆ ಸೇರಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಆದರೆ, ದೇಶದ 20 ಸ್ಮಾರ್ಟ್ಸಿಟಿಗಳಲ್ಲಿ ಬೆಳಗಾವಿ ಮತ್ತು ದಾವಣಗೆರೆ ಮಾತ್ರ ಸ್ಥಾನ ಪಡೆದಿದ್ದವು.