ಸಹರಾನ್ಪುರ : ದೇಶ ಬದಲಾಗುತ್ತಿದೆ. ಆದರೆ ಕೆಲವರ ಮನಸ್ಥಿತಿ ಮಾತ್ರ ಬದಲಾಗಿಲ್ಲ ಎಂದು ಹೇಳುವ ಮೂಲಕ ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಕೇಂದ್ರ ಎನ್.ಡಿ.ಎ ಸರ್ಕಾರ 2 ವರ್ಷ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಮುಂದಿನ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಈ ಬೃಹತ್ ರ್ಯಾಲಿ ನಡೆಸಿದೆ ಎಂದು ಹೇಳಲಾಗುತ್ತಿದೆ.
ಎರಡು ವರ್ಷದ ಹಿಂದೆ ನಿತ್ಯವೂ ದಿನಪತ್ರಿಕೆಗಳಲ್ಲಿ ಭ್ರಷ್ಟಾಚಾರದ್ದೇ ಸುದ್ದಿಯಾಗಿತ್ತು. ಆದರೆ ಎನ್ಡಿಎ ಸರ್ಕಾರದ ಎರಡು ವರ್ಷದ ಅವಧಿಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿಲ್ಲ. ನನ್ನ ಸರಕಾರದ ಬಗ್ಗೆ ಜನರು ಮತ್ತು ಮಾಧ್ಯಮಗಳು ವಿಮರ್ಶೆ, ಟೀಕೆ-ಟಿಪ್ಪಣಿ ಮಾಡುವುದನ್ನು ನಾನು ಸದಾ ಸ್ವಾಗತಿಸುತ್ತೇನೆ ಎಂದು ಹೇಳಿದರು.
ಎರಡು ವರ್ಷದ ಹಿಂದೆ ಇದೇ ದಿನ ನಾನು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ನಾನು ಈ ಮೊದಲೇ ಹೇಳಿದಂತೆ ದೇಶದ ಪ್ರಧಾನ ಸೇವಕ...ನಾನು ನನ್ನ ಕೈಲಾದಷ್ಟು ದೇಶದ ಜನರ ಸೇವೆ ಮಾಡಲು ಪ್ರಯತ್ನಿಸುತ್ತೇನೆ' ಎಂದರು.
ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿದೆ, ಸರ್ಕಾರಿ ಆಸ್ಪತ್ರೆಗಳ ವೈದ್ಯರ ನಿವೃತ್ತಿ ವಯೋಮಿತಿಯನ್ನು 65ಕ್ಕೆ ಹೆಚ್ಚಳ ಮಾಡುವುದಾಗಿ ಘೊಷಿಸಿದ್ದಾರೆ. ಪ್ರಸ್ತುತ ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸು 60. ಕೆಲವು ರಾಜ್ಯಗಳಲ್ಲಿ 62 ಇದೆ. ದೇಶಾದ್ಯಂತ 65ರ ವಯೋಮಿತಿ ನಿಗದಿಪಡಿಸಲು ಮುಂದಿನ ವಾರ ಕೇಂದ್ರ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ವೈದ್ಯರು ಪ್ರತಿ ತಿಂಗಳು 9ನೇ ತಾರೀಖಿನಂದು ಬಡ ಗರ್ಭಿಣಿಯರಿಗೆ ಉಚಿತ ಚಿಕಿತ್ಸೆ ನೀಡುವ ಮೂಲಕ ದೇಶದ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ಸಲ್ಲಿಸಬೇಕು ಎಂದು ಮೋದಿ ಮನವಿ ಮಾಡಿದ್ದಾರೆ.