ಬೆಂಗಳೂರು : ರೈತರು ಅಹಿಂಸಾ ಸೈನಿಕರಿದ್ದಂತೆ. ಸದ್ಯ ಸರ್ಕಾರಗಳ ಯೋಜನೆಗಳು ಕಾಗದದಲ್ಲಿಯೇ ಉಳಿದಿದ್ದು, ಅನುಷ್ಠಾನಕ್ಕೆ ಬರುತ್ತಿಲ್ಲ. ಕೂಡಲೇ ಸರ್ಕಾರಗಳು ರೈತರ ಸಾಲ ಮನ್ನಾ ಮಾಡಬೇಕು ಎಂದು ಮಹಾತ್ಮಾ ಗಾಂಧಿ ಮೊಮ್ಮಗಳು, ಕಸ್ತೂರ್ ಬಾ ಗಾಂಧಿ ನ್ಯಾಷನಲ್ ಸ್ಮಾರಕ ಟ್ರಸ್ಟಿ ತಾರಾಗಾಂಧಿ ಭಟ್ಟಾಚಾರ್ಯ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೃಹತ್ ರೈತ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರಿಗೆ ಆತ್ಮಹತ್ಯೆಗೆ ಕಾರಣಗಳೇನು ಹಾಗೂ ಅವರ ಸಮಸ್ಯೆಗಳನ್ನು ಪಟ್ಟಿ ಮಾಡಿ ನಮಗೆ ನೀಡಿ. ನಾನು ಪ್ರಧಾನ ಮಂತ್ರಿ ಹಾಗೂ ರಾಷ್ಟ್ರಪತಿಗಳಿಗೆ ಪತ್ರ ಬರೆದು ಪರಿಹಾರ ಕಲ್ಪಿಸುವಂತೆ ಮನವಿ ಮಾಡುತ್ತೇನೆ. ರೈತರು ಜಾಗೃತರಾದಾಗ ಮಾತ್ರ ಸರ್ಕಾರಗಳು ಕಾರ್ಯನಿರ್ವಹಿಸಲಿವೆ ಎಂದರು.
ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರಾಜ್ಯದ ಕೃಷಿ ಬೆಲೆ ಆಯೋಗ, 17 ಕೃಷಿ ಉತ್ಪನ್ನಗಳ ಪೈಕಿ 16 ಕೃಷಿ ಉತ್ಪನ್ನಗಳು ಕನಿಷ್ಟ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ ಎಂದು ವರದಿ ನೀಡಿದೆ. ಆದ್ದರಿಂದ ಕೃಷಿ ಉತ್ಪನ್ನಗಳಿಗೂ ಕನಿಷ್ಟ ಬೆಂಬಲ ಬೆಲೆ ಘೋಷಿಸಬೇಕು. ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಬೇಕು. ನೀರಾವರಿ ಯೋಜನೆಗಳನ್ನು ಶೀಘ್ರಗತಿಯಲ್ಲಿ ಅನುಷ್ಠಾನಕ್ಕೆ ತರಬೇಕು. ರೈತರ ಕಂದಾಯ, ವಿದ್ಯುಚ್ಛಕ್ತಿ ಬಿಲ್ ಬಾಕಿಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.
ಒಟ್ಟಿನಲ್ಲಿ ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಇದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇದನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಬೃಹತ್ ರೈತ ಸಮಾವೇಶದಲ್ಲಿ ಒತ್ತಾಯಿಸಲಾಗಿದೆ.