ಬೆಂಗಳೂರು : ಜೂನ್ 4ರಂದು ಶನಿವಾರ ಪೊಲೀಸ್ ಇಲಾಖೆಯ ಯಾರೊಬ್ಬರೂ ಶನಿವಾರ ರಜೆ ಪಡೆಯುವುದಿಲ್ಲ. ಪ್ರತಿಯೊಬ್ಬ ಸಿಬ್ಬಂದಿಯೂ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಸ್ಪಷ್ಟಪಡಿಸಿದ್ದಾರೆ.
ನೃಪತುಂಗ ರಸ್ತೆಯ ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಪ್ರತಿಭಟನೆಗೆ ಸಂಬಂಧಿಸಿದಂತೆ ಕಳೆದ ಏಳು ದಿನಗಳಿಂದ ಇಲಾಖೆಯಲ್ಲಿ ಉದ್ಭವವಾಗಿದ್ದ ಗೊಂದಲದ ಪರಿಸ್ಥಿತಿ ತಿಳಿಯಾಗಿದೆ ಎಂದು ಹೇಳಿದರು.
ಕೆಲ ಪೊಲೀಸರು ರಜೆ ಕೋರಿ ಅರ್ಜಿ ಸಲ್ಲಿಸಿದ್ದಾರೆಯೇ ಹೊರತು ಪ್ರತಿಭಟನೆ ನಡೆಸುತ್ತೇವೆ ಎಂದು ಯಾರೂ ಹೇಳಿಲ್ಲ. ಇಲಾಖೆಯ ಹೊರಗಿನ ಕೆಲವರು ಅದನ್ನು ಪೊಲೀಸರ ಪ್ರತಿಭಟನೆ ಎಂದು ಪ್ರಚಾರ ನಡೆಸಿದ್ದಾರೆ. ಇದಕ್ಕೆ ಕೆಲ ರೌಡಿಶೀಟರ್ಗಳೂ ಸಹಕರಿಸಿದ್ದಾರೆ ಎಂದು ಹೇಳಿದರು.
ಪೊಲೀಸರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುತ್ತದೆ. ಕಾನೂನಿನಲ್ಲಿ ಪೊಲೀಸರಿಗೆ ಪ್ರತಿಭಟನೆ ನಡೆಸುವ ಹಕ್ಕಿಲ್ಲ. ಶಿಸ್ತು ಉಲ್ಲಂಘಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದರು.
ಪೊಲೀಸ್ ಇಲಾಖೆಯು ಒಂದು ಕುಟುಂಬವಿದ್ದಂತೆ. ಈ ಕುಟುಂಬವನ್ನು ಒಡೆಯಲು ಹೊರಗಿನ ಕೆಲ ಶಕ್ತಿಗಳು ಯತ್ನಿಸಿದ್ದವು. ಆದರೆ, ಯಾವುದೇ ಕಾರಣಕ್ಕೂ ಅಂತಹ ಶಕ್ತಿಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದ್ದಾರೆ.