ಬೆಂಗಳೂರು : ಸರ್ಕಾರದ ಇಲಾಖೆಗಳು ಹಾಗೂ ರೈತರ ನಡುವಿನ ಅಂತರವನ್ನು ಕಡಿಮೆ ಮಾಡಲು ಕೃಷಿ ಅಭಿಯಾನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಮತ್ತು ಸಹಕಾರ ಇಲಾಖೆಗಳು ಹಾಗೂ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಇಲಾಖೆಗಳ ಸಹಯೋಗದೊಂದಿಗೆ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಘೋಷ ವಾಕ್ಯದೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು.
ದಿನೇ ದಿನೇ ರಾಜ್ಯದಲ್ಲಿ ಹಾಗೂ ರಾಷ್ಟ್ರದಲ್ಲಿ ಜನಸಂಖ್ಯಾ ಪ್ರಮಾಣವು ಹೆಚ್ಚುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ ಕೃಷಿ ಉತ್ಪಾದನೆಯೂ ಹೆಚ್ಚಬೇಕು. ಆಗ ಮಾತ್ರ ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬನೆ ಸಾಧಿಸಲು ಸಾಧ್ಯ. ಇದು ಸಾಕಾರಗೊಳ್ಳಬೇಕಾದರೆ ಕೃಷಿ ಚಟುವಟಿಕೆಗಳ ಸಂಪೂರ್ಣ ಮಾಹಿತಿ ರೈತರಲ್ಲಿ ಲಭ್ಯವಿರಬೇಕು. ಈ ಹಿನ್ನೆಲೆಯಲ್ಲಿಯೇ ಮುಂಗಾರು ಮಳೆ ಪ್ರಾರಂಭವಾಗುವ ಮುನ್ನವೇ, ರಾಜ್ಯಾದ್ಯಂತ ಗ್ರಾಮಪಂಚಾಯತ್ ಮಟ್ಟದಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೃಷಿ ಅಭಿಯಾನದಲ್ಲಿ ಹಳ್ಳಿ ಹಳ್ಳಿಗೂ ಭೇಟಿ ನೀಡಲಿರುವ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ರೈತನ ಭೂಮಿಯ ಮಣ್ಣು ಪರೀಕ್ಷೆ ಮಾಡಿ, ಮಣ್ಣು ಫಲವತ್ತತೆಯನ್ನು ಉತ್ತಮಪಡಿಸಲು ರಾಸಾಯನಿಕ ಹಾಗೂ ರಸಗೊಬ್ಬರದ ಬಳಕೆ ಕುರಿತಂತೆ ಮಾಹಿತಿ ನೀಡಲಿದ್ದಾರೆ. ಅಲ್ಲದೆ, ಅಂತಹ ಭೂಮಿಯಲ್ಲಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ರೈತರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದರು.
ಮಳೆಯಾಶ್ರಿತ ಬೆಳೆಗಳು ಹಾಗೂ ನೀರಾವರಿ ಆಶ್ರಿತ ಬೆಳೆಗಳ ಬಗ್ಗೆ ವಿವರಿಸುತ್ತಾರೆ. ಬೆಳೆಗಳಿಗೆ ತಗುಲುವ ರೋಗದ ಬಗ್ಗೆ ಮುಂಜಾಗರೂಕತಾ ಕ್ರಮಗಳನ್ನು ತಿಳಿಸುತ್ತಾರೆ. ರೋಗ ನಿಯಂತ್ರಣಕ್ಕೆ ಬಳಸಬೇಕಾದ ಕ್ರಿಮಿನಾಶಕ ಹಾಗೂ ಕೀಟನಾಶಕಗಳನ್ನು ಉಪಯೋಗಿಸುವ ಬಗ್ಗೆ ಸಲಹೆ ನೀಡುತ್ತಾರೆ. ಹೊಸ ತಳಿ, ಹೊಸ ತಂತ್ರಜ್ಞಾನ ಹಾಗೂ ಹೊಸ ಪರಿಕರಗಳ ಬಳಕೆಯನ್ನು ಪರಿಚಯಿಸುತ್ತಾರೆ. ಅಂತೆಯೇ, ಬೆಳೆ ವಿಮೆಯ ಮಹತ್ವವನ್ನು ಮನವರಿಕೆ ಮಾಡಿಕೊಡಲಿದ್ದಾರೆ. ನಂತರ, ಹೋಬಳಿಮಟ್ಟದಲ್ಲಿ ಆಯೋಜಿಸುವ ಕೃಷಿ ಮೇಳ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರೊಂದಿಗೆ ಅನುಭವ ಹಂಚಿಕೆ ಹಾಗೂ ನೇರ ಸಂವಾದಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಕೃಷಿ ಚಟುವಟಿಕೆಗಳಲ್ಲಿ ಯಶಸ್ಸು ಗಳಿಸಿರುವ ಪ್ರಗತಿಪರ ರೈತರು ತಮ್ಮ ರೈತ ಸೋದರರ ಪ್ರಶ್ನೆಗಳಿಗೆ ಉತ್ತರಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವತ್ತ ಬೆಳಕು ಚೆಲ್ಲಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಕೃಷಿ ಸಚಿವ ಕೃಷ್ಣ ಬೈರೇಗೌಡ, ಮೂಲಸೌಲಭ್ಯ ಮತ್ತು ಹಜ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಆರ್. ರೋಷನ್ ಬೇಗ್, ಇಂಧನ ಸಚಿವ ಡಿ. ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ಮೊದಲಾದವರು ಉಪಸ್ಥಿತರಿದ್ದರು.