ಕೊಚ್ಚಿ : ನೈಋತ್ಯ ಮುಂಗಾರು ಮಾರುತ ಕೇರಳ ಪ್ರವೇಶಿದ್ದು, ತಮಿಳುನಾಡು ಮತ್ತು ಕೇರಳ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಕೇಂದ್ರ ಹವಾಮಾನ ಇಲಾಖೆ ಜೂನ್ 9ಕ್ಕೆ ಮಾನ್ಸೂನ್ ಮಾರುತಗಳು ಕೇರಳ ಪ್ರವೇಶ ಮಾಡಲಿವೆ ಎಂದು ಹೇಳಿತ್ತು. ಆದರೆ ಎರಡು ದಿನ ಮುಂಚಿತವಾಗಿಯೇ ಮಾನ್ಸೂನ್ ಮಾರುತಗಳು ಕೇರಳ ಪ್ರವೇಶ ಮಾಡಿದ್ದು, ಈ ಭಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಕೇರಳದ ಮತ್ತು ಲಕ್ಷ ದ್ವೀಪದಲ್ಲಿ ಬೆಳಗ್ಗೆ ಭಾರೀ ಮಳೆಯಾಗಿದ್ದು ಇಡುಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಇನ್ನು ಕೇಳದಲ್ಲಿ ಭಾರೀ ಮಳೆಗೆ ಭೂ ಕುಸಿತ ಕೂಡ ಉಂಟಾಗಿದೆ.
ಮುಂದಿನ 48 ಗಂಟೆಗಳಲ್ಲಿ ಮಾನ್ಸೂನ್ ಮಾರುತಗಳು ಕರ್ನಾಟಕದ ಕರಾವಳಿ ತೀರ ಪ್ರದೇಶವನ್ನು ಪ್ರವೇಶಿಸಲಿದೆ. ಈಗಾಗಲೇ ಕರ್ನಾಟಕದ ಕರಾವಳಿ ತೀರ ಪ್ರದೇಶಗಳಲ್ಲಿ ಇದರ ಪರಿಣಾಮ ಗೋಚರಿಸುತ್ತಿದ್ದು, ಕರಾವಳಿ ತೀರದ ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ.
ಪಶ್ಚಿಮ ಮತ್ತು ಪೂರ್ವ ರಾಜಸ್ಥಾನ, ಪಶ್ಚಿಮ ಹರಿಯಾಣ ಮತ್ತು ಗುಜರಾತ್ ನ ಕೆಲವು ಕಡೆಗಳಲ್ಲಿ ಸದ್ಯ ಈಗಿರುವ ಹವಾಮಾನವೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.