ಮೈಸೂರು : 2018ರ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎದುರಿಸಲಿದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯಸಿಂಗ್ ತಿಳಿಸಿದ್ದಾರೆ.
ಮೈಸೂರಿಗೆ ಆಗಮಿಸಿದ್ದ ದಿಗ್ವಿಜಯಸಿಂಗ್, ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯನ್ನು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲೇ ಪಕ್ಷ ಎದುರಿಸಲಿದೆ. ಜತೆಗೆ ಅವರು ಸಹ ಸ್ಪರ್ಧಿಸಲಿದ್ದಾರೆ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ಅಲ್ಲಗಳೆದರು.
ದಲಿತ ಸಿಎಂ ಬಗ್ಗೆ ಎದ್ದಿರುವ ಕೂಗು ಸದ್ಯಕ್ಕೆ ಅಪ್ರಸ್ತುತ. 2018ರಲ್ಲಿ ಕಾಂಗ್ರೆಸ್ ಬಹುಮತ ಪಡೆದ ನಂತರ ಪಕ್ಷದ ಶಾಸಕಾಂಗ ಸಭೆಯಲ್ಲಿ ಶಾಸಕರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಸಂಪುಟ ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ. ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ, ಸಿಎಂ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ನ 8 ಜನ ಶಾಸಕರು ಯಾವುದೇ ಷರತ್ತು ವಿಧಿಸಿಲ್ಲ. ಬೇಡಿಕೆಯನ್ನೂ ಪಕ್ಷದ ಮುಂದಿಟ್ಟಿಲ್ಲ. ಅವರಿಗೆ ಕಾಂಗ್ರೆಸ್ ಕೂಡ ಯಾವುದೇ ಬಗೆಯ ಭರವಸೆ, ಆಶ್ವಾಸನೆ ನೀಡಿಲ್ಲ. ಆದರೆ ಜೆಡಿಎಸ್ನ ಆಂತರಿಕ ಕಚ್ಚಾಟದಿಂದ ಬೇಸತ್ತು ಅವರೆಲ್ಲ ಕಾಂಗ್ರೆಸ್ನ್ನು ಬೆಂಬಲಿಸಿದ್ದಾರೆ.