ನವದೆಹಲಿ : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮತಿ ಸಿಕ್ಕಿದೆ. ಆದರೆ ಸಂಪುಟಕ್ಕೆ ಯಾರನ್ನು ಕೈಬಿಡಬೇಕು, ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಬಿಕ್ಕಟ್ಟು ಶುರುವಾಗಿದೆ.
ಸಚಿವ ಸಂಪುಟದಿಂದ ಹಿರಿಯ ಸಚಿವರನ್ನು ಕೈ ಬಿಡುವ ಹಾಗೂ ಈ ಹಂತದಲ್ಲಿ ದೊಡ್ಡ ಪ್ರಮಾಣದ ಪುನಾರಚನೆ ನಡೆಸುವುದರಿಂದ ಪಕ್ಷದ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರಿಗೆ ವಿವರಣೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸೋನಿಯಾ ಗಾಂಧಿ ತಮ್ಮ ತೀರ್ಮಾನವನ್ನು ಒಂದು ದಿನ ಮುಂದೂಡಿದ್ದು, ಇಂದು ಮಧ್ಯಾಹ್ನದ ವೇಳೆಗೆ ಸಂಪುಟ ಪುನಾರಚನೆ ಕಸರತ್ತಿನ ಫಲಿತಾಂಶ ಹೊರಬೀಳಲಿದೆ.
ಸಂಪುಟ ಪುನಾರಚನೆಯಿಂದ ಜಾತಿ ಹಾಗೂ ಪ್ರಾದೇಶಿಕ ಅಸಮತೋಲನವಾಗಬಾರದು ಎಂಬ ಕಾಂಗ್ರೆಸ್ ಹಿರಿಯ ನಾಯಕರ ಮಾತಿಗೆ ಮನ್ನಣೆ ನೀಡಿರುವ ಸೋನಿಯಾ ಗಾಂಧಿ, ಈ ಬಗ್ಗೆ ರ್ಚಚಿಸಿ ಅಂತಿಮ ಪಟ್ಟಿ ತರುವಂತೆ ಸೂಚಿಸಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆಗೆ ಹೈಕಮಾಂಡ್ ಜತೆ ಇನ್ನೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಭಾನುವಾರವೇ ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆಯಿದೆ.
ಒಟ್ಟಿನಲ್ಲಿ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿರುವ ಸಂಪುಟ ಪುನಾರಚನೆ ಕಸರತ್ತಿಗೆ ಇಂದು ತೆರೆ ಬೀಳಲಿದೆ.