ನವದೆಹಲಿ : ಜಮ್ಮು ಕಾಶ್ಮೀರದಲ್ಲಿ ಕಳೆದ ನಾಲ್ಕು ದಿನಗಳಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯನ್ನು ತಿಳಿಗೊಳಿಸುವ ಸಂಬಂಧ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟ, ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಗಲಭೆ ಹಿನ್ನಲೆಯಲ್ಲಿ ಪ್ರಧಾನಿ ಸಭೆ ನಡೆಸಲಿದ್ದಾರೆ. ಕಾಶ್ಮೀರದಲ್ಲಿ ಉಂಟಾಗಿರುವ ಸಮಸ್ಯೆಯಿಂದಾಗಿ ಪ್ರವಾಸಿಗರಿಗೆ ಹಾಗೂ ಅಲ್ಲಿನ ನಿವಾಸಿಗಳಿಗೆ ತೀವ್ರವಾದ ತೊಂದರೆ ಉಂಟಾಗಿದೆ. ಅಲ್ಲದೇ ಈಗಾಗಲೇ ಅಮರನಾಥ ಯಾತ್ರಿಗಳ ಪ್ರವಾಸಕ್ಕೂ ತಡೆಯೊಡ್ಡಲಾಗಿದೆ.
ಈ ಎಲ್ಲಾ ವಿಚಾರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಮಾಲೋಚನೆ ನಡೆಸಲಿದ್ದಾರೆ. ಅಲ್ಲದೇ ಪರಿಸ್ಥಿತಿ ಹತೋಟಿಗೆ ತರಲು ಅನುಸರಿಸಬಹುದಾದ ಕ್ರಮಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.