ಬೆಂಗಳೂರು : ಡಿವೈಎಸ್ಪಿ ಎಂ.ಕೆ.ಗಣಪತಿ ಅವರಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರೆ ಒಂದೇ ನಿಮಿಷದಲ್ಲೇ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ತಮ್ಮ ರಾಜಿನಾಮೆ ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಜಾರ್ಜ್, ಮುಖ್ಯಮಂತ್ರಿಗಳು ಬಯಸಿದರೆ ರಾಜಿನಾಮೆ ನೀಡುತ್ತೇನೆ ಎಂದರು.
ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣ ವಿಚಾರದಲ್ಲಿ ವಿನಾಕಾರಣ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಗೃಹ ಸಚಿವನಾಗಿದ್ದಾಗ ಇಲಾಖೆ ತನಿಖೆಯಲ್ಲೂ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಹೇಳಿದರು.
ನನ್ನಿಂದ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಧಕ್ಕೆಯಾಗುವುದಾದರೆ ನಾನು ರಾಜಿನಾಮೆ ನೀಡುತ್ತೇನೆ. ನಾನು ಎಂದಿಗೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಂಡವನಲ್ಲ. ನಾನು ಗಣಪತಿಯವರಿಗೆ ಕಿರುಕುಳ ನೀಡಿದ್ದೇನೆಂದು ವಿಪಕ್ಷಗಳು ಇಲ್ಲ ಸಲ್ಲದ ಆರೋಪ ಮಾಡುತ್ತಿವೆ. ಒಂದು ವೇಳೆ ನಾನು ಕಿರುಕುಳ ನೀಡಿದ್ದರೆ ಆ ಬಗ್ಗೆ ಪ್ರತಿಪಕ್ಷಗಳ ಬಳಿ ಸಾಕ್ಷಿಯಿದೆಯೇ ಎಂದು ಪ್ರಶ್ನಿಸಿದ್ದಾರೆ.