ಬೆಂಗಳೂರು : ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿದ್ದ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಿದ್ದಾರೆ.
ಸಚಿವರು ಹಾಗೂ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದಕ್ಕೆ ಮಡಿಕೇರಿ ನ್ಯಾಯಾಲಯ ಸೂಚನೆ ನೀಡಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.
ಕಳೆದ 12 ದಿನಗಳಿಂದ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಸಾರ್ವಜನಿಕ ವಲಯದಲ್ಲಿ ಭಾರೀ ಹೋರಾಟವೇ ನಡೆದಿತ್ತು. ಜುಲೈ 11ರಿಂದ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ಆರಂಭವಾಗಿತ್ತು. ಜಾರ್ಜ್ ರಾಜೀನಾಮೆ ಪಡೆಯುವ ಸಾಧ್ಯತೆಯನ್ನು ತಿರಸ್ಕರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾರ್ಜ್ ರಕ್ಷಣೆಗೆ ನಿಂತಿದ್ದರು.
ಆದರೆ ಮಡಿಕೇರಿ ಕೋರ್ಟ್ ಆದೇಶ ಬರುತ್ತಿದ್ದಂತೆ ವಿಧಾನಮಂಡಲದ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಕೂಡಲೇ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಜಾರ್ಜ್, ರಾಜೀನಾಮೆ ನೀಡಿ ತುರ್ತು ಸಚಿವ ಸಂಪುಟ ಸಭೆಗೆ ಹಾಜರಾದರು. ಸಚಿವ ಸಂಪುಟ ಸಭೆಯ ಕೊನೆಯಲ್ಲಿ ಜಾರ್ಜ್ ರಾಜೀನಾಮೆಯನ್ನು ಸಿದ್ದರಾಮಯ್ಯ ಅಂಗೀಕರಿಸಿದರು.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾರ್ಜ್, ‘ಪಕ್ಷ ಹಾಗೂ ಸರ್ಕಾರದ ಹಿತದೃಷ್ಟಿಯಿಂದ ರಾಜೀನಾಮೆ ನೀಡಿದ್ದೇನೆ. ಕಾನೂನು ಹೋರಾಟದ ಮೂಲಕ ನನ್ನ ಮೇಲಿನ ಆರೋಪದಿಂದ ಮುಕ್ತನಾಗುತ್ತೇನೆ’ ಎಂದರು.
ಜಾರ್ಜ್ ನೀಡಿದ್ದ ರಾಜಿನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನಕ್ಕೆ ರವಾನಿಸಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಗಣಪತಿ ಅವರು ಆತ್ಮಹತ್ಯೆಗೂ ಮುನ್ನ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿ, ತನ್ನ ಸಾವಿಗೆ ಹಿಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರೊಣವ್ ಮೊಹಂತಿ ಮತ್ತು ಎ.ಎಂ.ಪ್ರಸಾದ್ ಕಾರಣ ಎಂದು ದೂರಿದ್ದರು.