ನವದೆಹಲಿ : ಕಾಶ್ಮೀರದಲ್ಲಿನ ಹಿಂಸಾಚಾರಕ್ಕೆ ಪಾಕಿಸ್ತಾನವೇ ನೇರ ಹೊಣೆ. ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪಾಕ್ ಹಣ ನೀಡುತ್ತಿದೆ ಎಂದು ಕೆಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರ ಭಾರತ ದೇಶದ ಕಿರೀಟ ಇದ್ದಂತೆ. ಹಾಗಾಗಿ ಯಾವುದೇ ಪರಿಸ್ಥಿತಿ ಎದುರಿಸಲು ಕೇಂದ್ರ ಸರ್ಕಾರ ಸಿದ್ಧವೆದೆ. ಭಾರತದಲ್ಲಿ ವಿನಾಕಾರಣ ಅಭದ್ರತೆ ತಲೆದೋರುವಂತೆ ಮಾಡಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಇದಕ್ಕೆ ಗಡಿ ಪ್ರದೇಶ ಕಾಶ್ಮೀರವನ್ನು ಗುರಿಯಾಗಿಸಿಕೊಂಡಿದೆ. ಆದರೆ ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡುವುದಿಲ್ಲ ಎಂದು ಖಡಕ್ ಎಚ್ಚರಿಕೆಯ ಸಂದೇಶ ನೀಡಿದರು.
ವಿವಿಧತೆಯಲ್ಲಿ ಏಕತೆ ನಮ್ಮ ಧ್ಯೆಯೋದ್ದೇಶ. ಭಾರತದಲ್ಲಿನ ಮುಸ್ಲಿಮರ ಬಗ್ಗೆ ಪಾಕಿಸ್ತಾನ ಚಿಂತಿಸಬೇಕಾದ ಅಗತ್ಯವಿಲ್ಲ. ಸಂಕಷ್ಟದ ಪರಿಸ್ಥಿತಿಯಲ್ಲಿ ಇಡಿ ದೇಶವೇ ಒಂದಾಗಬೇಕು ಎಂದು ಹೇಳಿದರು.
ಪ್ರಧಾನಿಯವರು ಈಗಾಗಲೇ ಕಾಶ್ಮೀರದಲ್ಲಿನ ಬಿಕ್ಕಟ್ಟು ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಕ್ರಮಕ್ಕೂ ಸೂಚಿಸಿದ್ದು, ಈ ಬಗ್ಗೆ ವರದಿ ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.