ಬೆಂಗಳೂರು : ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಮಳೆಯ ಅಭಾವ ಹಾಗೂ ನೀರಿನ ಕೊರತೆಯ ವಾಸ್ತವ ಚಿತ್ರಣವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ವಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ, ಮಳೆ ಅಭಾವದಿಂದಾಗಿ ಕಾವೇರಿ ಕಣಿವೆಯಲ್ಲಿ ಕುಡಿಯುವ ನೀರಿಗೆ ತೊಂದರೆಯುಂಟಾಗಿದೆ. ಈ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರಾವರಿಗಾಗಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ನಿಲುವಿಗೆ ಎಲ್ಲಾ ಪಕ್ಷಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದರು. ಅಲ್ಲದೇ ವಾಸ್ತವ ಸ್ಥಿತಿಯನ್ನು ಸುಪ್ರೀಂ ಕೋರ್ಟ್ ಗೆ ಮನದಟ್ಟು ಮಾಡುವ ನಿರ್ಧಾರಕ್ಕೆ ಬರಲಾಯಿತು.
ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭೆಯಲ್ಲಿ ಹಾಜರಿದ್ದ ಎಲ್ಲರೂ ಒಗ್ಗಟ್ಟಿನಿಂದ ವಾಸ್ತವ ಸ್ಥಿತಿಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ಅಭಿಪ್ರಾಯ ವ್ಯಕ್ತಪಡಿಸಿದರು. ಸುಪ್ರೀಂಕೋರ್ಟ್ನಲ್ಲಿ ತಮಿಳುನಾಡು ಸಲ್ಲಿಸಿರುವ ಅರ್ಜಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ನೀರಿನ ಪರಿಸ್ಥಿತಿ ಬಗ್ಗೆ ಸಮಗ್ರ ಚರ್ಚೆ ನಡೆಸಿದ್ದೇವೆ. ತಮಿಳುನಾಡಿಗೆ ನೀರು ಬಿಡುವಂತೆ ರಾಜ್ಯದ ಪರ ವಕೀಲ ನಾರಿಮನ್ ಅವರು ಅನ್ಯಾಯ ಮಾಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾಗಿದ್ದು ಎಂದರು.
ಕಾವೇರಿ, ಕೃಷ್ಣಾ ಸೇರಿದಂತೆ ಯಾವುದೇ ನೆಲ, ಜಲ, ಭಾಷೆ ವಿಚಾರದಲ್ಲಿ ರಾಜ್ಯದಲ್ಲಿ ಒಗ್ಗಟ್ಟಿದೆ. ಈಗಲೂ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಈ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಸಂಕಷ್ಟವಿದೆ. ಕಾವೇರಿ ಕೊಳ್ಳದ ಜಲಾಶಯಗಳಾದ ಕೆಆರ್ ಎಸ್, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳ ಒಟ್ಟು ಸಾಮರ್ಥ್ಯ 114 ಅಡಿ ಟಿಎಂಸಿ ಆದರೆ ಬಳಕೆ ಬರುವುದು 104 ಟಿಎಂಸಿ ಮಾತ್ರ. ಅದು ಕೂಡ ಭರ್ತಿಯಾದಾಗ ದೊರೆಯುವ ಪ್ರಮಾಣ ಇದಾಗಿದೆ ಎಂದರು.
ತಮಿಳುನಾಡು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಜಲಾಶಯದಲ್ಲಿ ನೀರಿನ ಮಟ್ಟ ಆಧಾರದ ಬದಲಿಗೆ ರಾಜ್ಯದಲ್ಲಿ ಬಿದ್ದಿರುವ ಒಟ್ಟಾರೆ ಮಳೆ ಆಧರಿಸಿ ನೀರು ಬಿಡುವಂತೆ ಆದೇಶಿಸಬೇಕು ಎಂದಿದೆ. ಸಂಕಷ್ಟ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್ ಗಮನಕ್ಕೆ ತಂದಿಲ್ಲ. ಸಾಮಾನ್ಯ ವರ್ಷದಲ್ಲಿ ಎಷ್ಟೆಷ್ಟು ಪ್ರಮಾಣದಲ್ಲಿ ನೀರು ಬಿಡಬೇಕು ಎಂದು ನಿಗದಿಪಡಿಸಿರುವಂತೆ 50 ಟಿಎಂಸಿ ಅಡಿ ನೀರು ಕೇಳಿದೆ. ಅಷ್ಟು ಪ್ರಮಾಣದ ನೀರು ಕೊಡಲು ಸಾಧ್ಯವಾಗದ ಪರಿಸ್ಥಿತಿ ಇದೆ ಎಂದು ವಿವರಿಸಿದರು.
ಸೆಪ್ಟೆಂಬರ್ 2 ರಂದು ಸುಪ್ರೀಂ ಕೋರ್ಟಿನಲ್ಲಿ ತಮಿಳುನಾಡಿನ ಅರ್ಜಿಯ ವಿಚಾರಣೆ ನಡೆಯಲಿದೆ.