ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯ ಬಂದ್ ಗೆ ಕರೆ ನೀಡಿದ್ದು, ಪ್ರತಿಭಟನೆಗಳು ಭುಗಿಲೆದ್ದಿವೆ.
ಸುಪ್ರೀಂ ತೀರ್ಪು ವಿರೋಧಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಸ್ತೆ ಮಧ್ಯೆ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವುದರಿಂದ ರಸ್ತೆ ಸಂಚಾರ ಅಸ್ತವಸ್ಯಗೊಂಡಿದೆ.
ಇನ್ನು ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಇಂದು ಶಾಲಾ-ಕಾಲೇಜುಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ರಜೆ ಘೋಷಿಸಿದ್ದಾರೆ.
ಇದೇ ವೇಳೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು, ಕಾವೇರಿ ನದಿ ನೀರು ಹಂಚಿಕೆ ಪರ ವಾದಿಸುತ್ತಿರುವ ರಾಜ್ಯದ ಪರ ವಕೀಲರಾದ ಪಾಲಿ ನಾರಿಮನ್ ರನ್ನು ಕೈಬಿಡುವಂತೆ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಾದೇಗೌಡ ಅಗ್ರಹಿಸಿದ್ದಾರೆ.