ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದ್ದು, ತಮಿಳುನಾಡಿಗೆ ಸೆ.21ರಿಂದ 27ರವರೆಗೆ ಪ್ರತಿದಿನ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಈ ಮೂಲಕ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಹಿನ್ನಡೆಯಾದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ನಲ್ಲಿಯೂ ಮತ್ತೆ ನಿರಾಸೆಯಾಗಿದೆ. ಮಿಳುನಾಡು ಕಾವೇರಿ ನೀರಿಗಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾ.ದೀಪಕ್ ಮಿಶ್ರಾ ಮತ್ತು ನ್ಯಾ.ಉದಯ್ ಲಲಿತ್ ಅವರನ್ನೊಳಗೊಂಡ ಪೀಠ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ತೀರ್ಪು ನೀಡಿದೆ. ಅಲ್ಲದೇ ಸೆ.21ರಿಂದ 27ರವರೆಗೆ ಪ್ರತಿದಿನ 6 ಸಾವಿರದಂತೆ ಒಟ್ಟು 42 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕಕ್ಕೆ ಸೂಚಿಸಿದೆ.
4 ವಾರಗಳ ಕಾಲಾವಕಾಶದೊಳಗೆ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿದೆ.
ಕರ್ನಾಟಕದ ಪರ ವಾದ ಮಂಡಿಸಿದ ಫಾಲಿ ಎಸ್ ನಾರಮನ್, ಕೋರ್ಟ್ ನಿಂದ ಯಾವುದೇ ತಾತ್ಕಾಲಿಕ ಆದೇಶ ಬೇಡ. ಈಗಿನ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಅಂಕಿ, ಅಂಶ ಸಹಿತ ವಾದ ಮಂಡಿಸಿದರೂ ಕೂಡಾ ರಾಜ್ಯದ ವಾದಕ್ಕೆ ಮನ್ನಣೆ ಸಿಕ್ಕಿಲ್ಲ. ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ತೀರ್ಪು ನೀಡಿದ ನ್ಯಾಯಪೀಠ, ಸೆ.28ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾದಲ್ಲಿ, ತಮಿಳುನಾಡಿಗೆ ಹೆಚ್ಚಿನ ಅನುಕೂಲವಾಗಲಿದೆ ಎನ್ನಲಾಗುತ್ತಿದೆ. ಕೃಷಿ, ನೀರಾವರಿ ತಜ್ಞರು ಸೇರಿದಂತೆ ಅಧ್ಯಕ್ಷ, ಸದಸ್ಯರನ್ನು ಕೇಂದ್ರ ಸರ್ಕಾರ ನೇಮಕ ಮಾಡಲಿದೆ. ಕಾವೇರಿ ಕೊಳ್ಳದ ಎಲ್ಲಾ ಜಲಾಶಯ ಮಂಡಳಿ ವ್ಯಾಪ್ತಿಗೆ ಸೇರಲಿದೆ. ಈ ಮಂಡಳಿ ನೀರು ಹಂಚಿಕೆ, ಬಿಡುಗಡೆ ಬಗ್ಗೆ ನಿರ್ವಹಣಾ ಮಂಡಳಿಯೇ ತೀರ್ಮಾನ ಕೈಗೊಳ್ಳುತ್ತದೆ. ಕರ್ನಾಟಕ, ತಮಿಳುನಾಡು, ಪುದುಚೇರಿ ಹಾಗೂ ಕೇರಳ ಸೇರಿದಂತೆ ನಾಲ್ಕು ರಾಜ್ಯಗಳ ಪ್ರತಿನಿಧಿಗಳು ಸದಸ್ಯರಾಗಿರುತ್ತಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ರಾಜ್ಯಾದ್ಯಂತ ಮತ್ತೆ ಪ್ರತಿಭಟನೆ, ಆಕ್ರೋಶ ವ್ಯಕ್ತವಾಗತೊಡಗಿದೆ.