ನವದೆಹಲಿ : ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಅರ್ಜಿ ವಿಚಾರಣೆ ನಡೆಯಲಿದ್ದು, ರಾಜ್ಯ ಸರ್ಕಾರ ನೀಡಿದ ಕಾರಣಗಳನ್ನು ಹಾಗೂ ವಿಧಾನಮಂಡಲ ಅಧಿವೇಶನದಲ್ಲಿ ಕೈಗೊಂಡ ನಿರ್ಣಯಗಳನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
ಡಿಸೆಂಬರ್ ಅಂತ್ಯದವರೆಗೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಹಾಗೂ ಕಾವೇರಿ ಕೊಳ್ಳದಲ್ಲಿ ಈಗಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಕೆ ಮಾಡಬೇಕು ಎಂಬ ಅಧಿವೇಶನದ ನಿರ್ಣಯದೊಂದಿಗೆ ನಿನ್ನೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಮಧ್ಯಾಹ್ನ 2 ಗಂಟೆಗೆ ಸುಪ್ರೀಂ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
ಸುಪ್ರೀಂ ಕೋರ್ಟ್ ವಿಚಾರಣೆ ಹಿನ್ನೆಲೆಯಲ್ಲಿ ಕಾವೇರಿ ವಿವಾದದಲ್ಲಿ ರಾಜ್ಯ ಸರ್ಕಾರದ ಪರ ವಾದ ಮಂಡಿಸುತ್ತಿರುವ ವಕೀಲರಾದ ಫಾಲಿ ಎಸ್ ನಾರಿಮನ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ಕಾನೂನು ಸಚಿವ ಟಿಬಿ ಜಯಚಂದ್ರ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.
ರಾಜ್ಯ ಸರ್ಕಾರ ನೀಡಿದ ಕಾರಣಗಳನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸುವ ಸಾಧ್ಯತೆಗಳಿವೆ ಎಂದು ನಿರೀಕ್ಷಿಸಲಾಗಿದೆ.