ಮೈಸೂರು : ಜಗತ್ಪ್ರಸಿದ್ದ ನಾಡಹಬ್ಬ 407ನೇ ದಸರಾ ಮಹೋತ್ಸವ ಸಾಂಕೃತಿಕ ನಗರಿಯಲ್ಲಿ ಕಳೆ ಕಟ್ಟಿದ್ದು, ಅರಮನೆಯ ಮುಖ್ಯದ್ವಾರದಲ್ಲಿ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಅಧಿಕೃತ ಚಾಲನೆ ನೀಡಿದರು.
ಅರಮನೆಯ ಮುಖ್ಯದ್ವಾರದಲ್ಲಿ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ಸಂಜೆ 4.45ಕ್ಕೆ ಶುಭ ಕುಂಬ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಿದ್ದ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
750 ಕೆ ಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತ ಅರ್ಜುನ ಆನೆ ರಾಜಗಾಂಭೀರ್ಯದಿಂದ ಮೆರವಣಿಗೆಯಲ್ಲಿ ಸಾಗುತ್ತಿದ್ದಂತೆ ಲಕ್ಷಾಂತರ ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಅರಮನೆಯಿಂದ ಬನ್ನಿಮಂಟಪದತ್ತ ಅರ್ಜುನ ಹೆಜ್ಜೆ ಹಾಕುತ್ತಿದ್ದು, ಒಟ್ಟು 5.5 ಕಿಲೋ ಮೀಟರ್ ದೂರದವರೆಗೆ ಜಂಬೂ ಸವಾರಿ ನಡೆಯಲಿದೆ.
ಸಂಜೆ 7 ಗಂಟೆಹೊತ್ತಿಗೆ ಅಂಬಾರಿ ಬನ್ನಿ ಮಂಟಪ ತಲುಪಲಿದ್ದು, ರಾತ್ರಿ 8ಕ್ಕೆ ಬನ್ನಿಮಂಟಪ ಮೈದಾನದಲ್ಲಿ ಆಕರ್ಷಕ ಪಂಜಿನ ಕವಾಯತು ನಡೆಯಲಿದೆ. ರಾಜ್ಯಪಾಲ ವಜು ಭಾಯಿ ವಾಲಾ ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ.