ಬೆಂಗಳೂರು : ರಾಜ್ಯ ಬಿಜೆಪಿ ಘಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಬಿಎಸ್ ವೈ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳದಲ್ಲಿ ಆರ್ ಎಸ್ಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಜನರಕ್ಷಾ ಯಾತ್ರೆಯನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಈ ಯಾತ್ರೆಗೆ ಬೆಂಬಲಿಸಿ ಮಾಜಿ ಡಿಸಿಎಂ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಪಾದಯಾತ್ರೆ ಆರಂಭಿಸಿತ್ತು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು ಸಿಪಿಎಂ ಕಛೇರಿ ಮುತ್ತಿಗೆ ಹಾಕುವುದನ್ನು ವಿಫಲಗೊಳಿಸಿದ್ದಾರೆ.
ಪಾದಯಾತ್ರೆಯಲ್ಲಿ ಬೃಹತ್ ಎಲ್ ಇಡಿ ಪರದೆಯನ್ನು ಅಳವಡಿಸಲಾಗಿತ್ತು. ಪರದೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಯ ದೃಶ್ಯವನ್ನು ಬಿತ್ತರಿಸಲಾಗುತ್ತಿತ್ತು. ಅಲ್ಲದೇ ಕಮ್ಯೂನಿಷ್ಟರ ಹಿಂಸಾಚಾರ ಕೊನೆಗೊಳ್ಳಲಿ, ಕಮ್ಯೂನಿಷ್ಟ್ ಗೂಂಡಾಗಿರಿ ವಿರುದ್ಧ ಜನರಕ್ಷಾ ಯಾತ್ರೆ ಎಂಬ ತಲೆಬರಹವುಳ್ಳ ಭಿತ್ತಿಪತ್ರ ಹಿಡಿದು ಬಿಜೆಪಿ ಕಾರ್ಯಕರ್ತರು ಸಾಗುತ್ತಿದ್ದರು.